ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 6720 ಕ್ಕೆ ಏರಿಕೆಯಾಗಿದೆ, 88 ಜನರು ಇದುವರೆಗೂ ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3119. ಈ ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ಆಂಧ್ರಪ್ರದೇಶದಲ್ಲಿ ಬಜೆಟ್ ಅಧಿವೇಶನ ಆರಂಭವಾಗಿದೆ. ಕೊರೊನಾ ಸಂದರ್ಭದಲ್ಲಿ ಅಧಿವೇಶನ ನಡೆಸುತ್ತಿರುವ ಮೊದಲ ರಾಜ್ಯ ಇದಾಗಿದ್ದು. ಜೂನ್ 30ರೊಳಗೆ ಬಜೆಟ್ಗೆ ಅನುಮೋದನೆ ಪಡೆಯಲಾಗುತ್ತದೆ. ರಾಜ್ಯಪಾಲ ಬಿಸ್ವಾ ಭೂಷಣ್ ಹರಿಚಂದನ್ ವಿಧಾನಸಭೆಯ ಉಭಯ ಕಲಾಪಗಳನ್ನು ಉದ್ದೇಶಿಸಿ ಮಾತನಾಡುವ ಮೂಲಕ ಬಜೆಟ್ ಅಧಿವೇಶನಕ್ಕೆ ಚಾಲನೆ ನೀಡಿದರು. ರಾಜಭವನದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಕಲಾಪ ಉದ್ದೇಶಿಸಿ ಭಾಷಣ ಮಾಡಿದರು. ಅಧಿವೇಶನದ ಮೊದಲ ದಿನವೇ ಹಣಕಾಸು ಸಚಿವ ಬುಗ್ಗನ್ ರಾಜೇಂದ್ರನಾಥ್ ರೆಡ್ಡಿ ಬಜೆಟ್ ಮಂಡನೆ ಮಾಡಿದರು. ವಿಧಾನಸಭೆಯಲ್ಲಿಯೂ ಸಾಮಾಜಿಕ ಅಂತರ ಕಾಪಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಮಾಧ್ಯಮಗಳನ್ನು ಹೊರತುಪಡಿಸಿ ಬೇರೆ ಯಾರೂ ಸಹ ಪ್ರವೇಶ ಮಾಡದಂತೆ ನಿಷೇಧ ಹೇರಲಾಗಿದೆ.