ಮಂಗಳೂರು: ನಿಲ್ಲಿಸಿದ್ದ ಲಾರಿಯೊಂದಕ್ಕೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಯುವತಿ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕೋಟೆಕಾರ್ ಬೀರಿಯಲ್ಲಿ ನಡೆದಿದೆ.
ನಗರದ ರಸ್ತೆಯ ಅಂಚಿನಲ್ಲಿ ಲಾರಿ ನಿಂತಿತ್ತು.ಆಗ ಲಾರಿಯನ್ನು ಗಮನಿಸದ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಬೈಕ್ ಮುಂಭಾಗ ನಜ್ಜುಗುಜ್ಜಾಗಿದ್ದು ಇಬ್ಬರೂ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತಕ್ಷಣವೇ ಸ್ಥಳೀಯರು ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.