ಸಿಲಿಕಾನ್ ಸಿಟಿಯಲ್ಲಿ ಆಸ್ಪತ್ರೆಗಳ ಬೇಜವಾಬ್ದಾರಿತನ ಮತ್ತೆ ಮತ್ತೆ ವರದಿಯಾಗುತ್ತಲೇ ಇದೆ. ಕೋವಿಡ್ ಪರಿಸ್ಥಿತಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕು ಇಲ್ಲದ ರೋಗಿಗಳಿಗೆ ಚಿಕಿತ್ಸೆ ಸಿಗುವುದು ಕಷ್ಟಕರವಾಗಿದೆ. ಅನಾರೋಗ್ಯಕ್ಕೀಡಾಗಿದ್ದ ಮಹಿಳೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಆಕೆ ಸಾವನ್ನಪ್ಪಿದ್ದಾರೆ. ಕುರುಬರಹಳ್ಳಿಯ ಲೋಕೇಶ್ ಎಂಬವರ ತಾಯಿಗೆ ಹೃದಯಾಘಾತ ಸಂಭವಿಸಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಕೆಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದರು. ಬಳಿಕ ಜಯದೇವ ಸೇರಿದಂತೆ ನಾಲ್ಕೈದು ಆಸ್ಪತ್ರೆಗಳಿಗೆ ಕರೆದೊಯ್ದರೂ ಎಲ್ಲಿಯೂ ಮಹಿಳೆಯನ್ನು ದಾಖಲಿಸಿಕೊಂಡಿಲ್ಲ.ನಂತರ ಕೋವಿಡ್ ಚಿಕಿತ್ಸೆ ಕೊಡುವ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸದ್ದಾರೆ. ಕೊನೆಗೆ ಮಹಿಳೆಯನ್ನು ಕೆಂಪೇಗೌಡ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ನೀಡಲು ವಿಳಂಬ ಮಾಡಿದ್ದಾರೆಂದು ಮಹಿಳೆಯ ಪುತ್ರ ಆರೋಪಿಸಿದ್ದಾರೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ ಮಹಿಳೆ ಸಾವನ್ನಪ್ಪಿದ್ದಾರೆ.