ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಇಂದು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಈ ಕ್ಷೇತ್ರದಿಂದ ತರಿಸಿಕೊಂಡ ವರದಿಯ ಕುರಿತು ಚರ್ಚಿಸಿ, ಪಕ್ಷದ ಸಂಸದೀಯ ಮಂಡಳಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಾಗುವುದು. ಶೀಘ್ರವೇ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆ. ಪಕ್ಷವು ಬೂತ್ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರ ವರೆಗೆ ಎಲ್ಲರೂ ಒಂದಾಗಿ ಕಾರ್ಯನಿರ್ವಹಿಸಿ, ಪಕ್ಷದ ಗೆಲುವಿಗಾಗಿ ಶ್ರಮಿಸುವುದಾಗಿ ತಿಳಿಸಿದರು.
ಮೇಕೆದಾಟು: ಮೇಕೆದಾಟು ಯೋಜನೆಯ ವಿಚಾರದಲ್ಲಿ ತಮಿಳುನಾಡು ರಾಜಕಾರಣ ಬೆರೆಸುತ್ತಿದ್ದು, ಈ ಯೋಜನೆ ತಮಿಳುನಾಡಿನ ಕೈಯಲ್ಲಿ ಇಲ್ಲ. ತಮಿಳು ನಾಡು ಸರ್ಕಾರವು ನಿರ್ಣಯ ಕೈಗೊಂಡು, ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ.ನಮ್ಮ ನಿಲುವಿನಲ್ಲಿ, ಪ್ರಯತ್ನದಲ್ಲಿ ಹಾಗೂ ಕಾನೂನು ಹೋರಾಟದಲ್ಲಿ ಯಾವುದೇ ಬದಲಾವಣೆ ಇಲ್ಲ. ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಳ್ಳಾರಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಚಿಂತನೆ :
ಕಳೆದ 10-12 ವರ್ಷಗಳ ಅವಧಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಉನ್ನತ ಮಟ್ಟದ ಸಮಿತಿಗಳಲ್ಲಿ ಅನುಮೋದನೆ ಪಡೆದುಕೊಂಡು, ಭೂಮಿ, ನೀರು ಹಂಚಿಕೆ ಮಾಡಿಸಿಕೊಂಡರೂ ಕೈಗಾರಿಕೆಗಳು ಸ್ಥಾಪನೆಯಾಗದೆ ಇರುವ ಹಲವು ಪ್ರಕರಣಗಳು ನಿಮ್ಮ ಗಮನದಲ್ಲಿದೆ. ಇದರಿಂದಾಗಿ ಬಹುದೊಡ್ಡ ಪ್ರಮಾಣದ ಭೂಮಿ ಬಳಕೆಯಾಗದೆ ಇರುವುದು ಸಹ ಅರಿವಿದೆ. ಈ ಹಿನ್ನೆಲೆಯಲ್ಲಿ ಇಂತಹ ಯೋಜನೆಗಳ ಪುನರ್ ಪರಿಶೀಲನೆ ನಡೆಸಲಾಗುವುದು. ಈ ಕಂಪೆನಿಗಳು ಕೈಗಾರಿಕೆ ಸ್ಥಾಪಿಸದೆ ಇದ್ದರೆ, ಅವರ ಹಂಚಿಕೆಯನ್ನು ರದ್ದುಪಡಿಸಿ, ಉದ್ಯೋಗ ಸೃಷ್ಟಿಗೆ ಪೂರಕವಾದ ಕೈಗಾರಿಕೆ ಸ್ಥಾಪನೆಗೆ ಮುಂದೆ ಬರುವವರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಳ್ಳಾರಿ ಕುಡಿಯುವ ನೀರಿನ ಸಮಸ್ಯೆಗೆ ಇಲ್ಲ ಅಂತ್ಯ:
ಬಳ್ಳಾರಿ ನಗರದಲ್ಲಿ 24X7 ಕುಡಿಯುವ ನೀರಿನ ಯೋಜನೆ ಕಳೆದ 10 ವರ್ಷಗಳಿಂದ ಸರಿಯಾಗಿ ಅನುಷ್ಠಾನಗೊಂಡಿಲ್ಲ ಎಂದು ಮಾಧ್ಯಮದವರು ತಿಳಿಸಿದಾಗ, ಮುಂದಿನ ತಿಂಗಳು ಬಳ್ಳಾರಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಮಾಹಿತಿ ತರಿಸಿಕೊಂಡು, ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.