ಬೆಂಗಳೂರು, ನಗರದ ಪಾದರಾಯನಪುರದಲ್ಲಿ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ. ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕೊರೋನ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ. ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರ ಹೆಡೆಮುರಿ ಕಟ್ಟಬೇಕು ಎಂದು ಹೇಳಿದರು.