ಕಾಂಗ್ರೆಸ್ ವಲಸೆ ಕಾರ್ಮಿಕರ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ನಾವು ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಕಳಿಸಲು ಅಲ್ಲಿನ ಸರ್ಕಾರಗಳಿಂದ ಅನುಮತಿ ಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ, ನಾವ್ಯಾರು ವಲಸೆ ಕಾರ್ಮಿಕರನ್ನು ಇಲ್ಲೇ ಬಲವಂತವಾಗಿ ಇಟ್ಟುಕೊಂಡಿಲ್ಲ. ಆದರೀಗ ಕೆಲವು ರಾಜ್ಯಗಳಿಂದ ಇದಕ್ಕೆ ಅನುಮತಿ ಸಿಕ್ಕಿಲ್ಲ. ಹಾಗಾಗಿ ನಾವು ಆಯಾ ರಾಜ್ಯಗಳ ವಲಸೆ ಕಾರ್ಮಿಕರನ್ನು ಕಳಿಸಲು ಸಾಧ್ಯವಾಗಿಲ್ಲ. ವಿದೇಶದಿಂದ ಬರುವವರಿಗೆ ಹೋಟೆಲ್ ವ್ಯವಸ್ಥೆ ಮಾಡಲಾಗಿದೆ. ಇದರ ವೆಚ್ಚವನ್ನು ಅವರೇ ಭರಿಸಲಿದ್ದಾರೆ. ಜತೆಗೆ ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಚೆಕ್ಪೋಸ್ಟ್ ತಪ್ಪಿಸಿ ಒಳಗೆ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಂದು ವೇಳೆ ಸರ್ಕಾರದ ಆದೇಶ ಉಲ್ಲಂಘಿಸಿ ಹೀಗೆ ಯಾರಾದರೂ ಬಂದಲ್ಲಿ ಅಂತವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ 10 ಜನ ಸಾವನ್ನಪ್ಪಿದ್ದಾರೆ. 300ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಈ ಕುರಿತು ಮಾತಾಡಿದ ಬೊಮ್ಮಾಯಿ, ಅಲ್ಲಿ ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಅನ್ನೋದು ಗೊತ್ತಿಲ್ಲ. ಇದು ತುಂಬಾ ಬಹಳ ಗಂಭೀರ ವಿಷಯ. ನಾವು ರಾಜ್ಯದಲ್ಲಿರುವ ಆ ರೀತಿಯ ಪ್ಯಾಕ್ಟರಿಗಳ ಮೇಲೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್ ನ್ಯೂಸ್ ಕನ್ನಡ