ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ನಕಲು ಮಾಡಿದ ಚೀಟಿ ಕೊಡಲು ಹೋಗಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯಲ್ಲಿ ಜರುಗಿದೆ. ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಯುವಕನನ್ನು ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕಾನಾಳ ಗ್ರಾಮದ ಸಾಗರ ಚಲವಾದಿ ಎಂದು ಗುರುತಿಸಲಾಗಿದೆ. ಹೂವಿನಹಿಪ್ಪರಗಿ ಗ್ರಾಮದ ವಿಶ್ವಚೇತನ ಪರೀಕ್ಷಾ ಕೇಂದ್ರಕ್ಕೆ ನುಗ್ಗಿ ನಕಲು ಮಾಡಿದ ಕಾಪಿ ಚೀಟಿ ಕೊಡುವ ವೇಳೆ ಪೊಲೀಸರು ಯುವಕನನ್ನು ಬೆನ್ನಟ್ಟಿ ಹಿಡಿದು, ಲಾಠಿ ರುಚಿ ತೋರಿಸಿದ್ದಾರೆ. ಈ ಹಂತದಲ್ಲಿ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಪೊಲೀಸರ ಹೊಡೆತಕ್ಕೆ ತಮ್ಮ ಮಗ ಮೃತಪಟ್ಟಿದ್ದಾನೆ ಎಂದು ಯುವಕ ಕುಟುಂಬ ಸದಸ್ಯರು ಆರೋಪಿಸುತ್ತಿದ್ದಾರೆ. ಆದರೆ ಹೃದಯ ಸಂಬಂಧಿ ಕಾಯಿಲೆ ಇದ್ದ ಕಾರಣ ಯುವಕ ಪೊಲೀಸರ ಬಂಧನದಿಂದ ಗಾಬರಿಗೊಂಡು ಹೃದಯಾಘಾತವಾಗಿ ಮೃತಪಟ್ಟಿದ್ದಾನೆಂದು ಪೊಲೀಸರು ವಾದಿಸುತ್ತಿದ್ದಾರೆ.