ಸೋಯಾಬೀನ್ ಬಿತ್ತನೆ ಮಾಡಿ ನಷ್ಟಕ್ಕೆ ಸಿಲುಕಿದ ರೈತರಿಗೆ ಪರಿಹಾರ ನೀಡಿ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಆಗ್ರಹಿಸಿದರು. ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಸಹಕಾರ ಇಲಾಖೆ ಹಾಗೂ ಬೀದರ್ ಜಿಲ್ಲೆ, ಹಾಗೂ ಸಹಕಾರಿ ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಬೀದರ್ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ್ದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ವಿತರಣೆ ಮಾಡಿದ ಸೋಯಾಬೀನ್ ಬೀಜಗಳು ಕಳಪೆ ಗುಣಮಟ್ಟದಲ್ಲಿದ್ದು, ಕಳಪೆ ಗುಣಮಟ್ಟದ ಬೀಜ ವಿತರಣೆ ಮಾಡಿರುವುದನ್ನು ಕೃಷಿ ಇಲಾಖೆಯವರು ಸಹ ಒಪ್ಪಿಕೊಂಡಿದ್ದಾರೆ. ಹಾಗಾಗಿ ಬೆಳೆ ನಷ್ಟ ಅನುಭವಿಸಿದ ರೈತರ ಜಮೀನುಗಳನ್ನು ಇನ್ನೂ ಮೂರು ನಾಲ್ಕು ದಿನಗಳಲ್ಲಿ ಸರ್ವೇ ನಡೆಸಿ ಪರಿಹಾರ ಘೋಷಣೆ ಮಾಡಬೇಕು. ಅಲ್ಲದೇ ಮುಖ್ಯಮಂತ್ರಿಗಳು, ಕೃಷಿ ಇಲಾಖೆ ಹಾಗೂ ಕೃಷಿ ಸಚಿವರು ಇಂತಹ ಕಳಪೆ ಗುಣಮಟ್ಟದ ಬೀಜ ವಿತರಣೆಯ ಮೇಲೆ ನಿಗಾ ವಹಿಸಬೇಕು. ಮುಂಗಾರು ಬಿತ್ತನೆ ಮಾಡಿ ಕೈಸುಟ್ಟುಕೊಂಡ ರೈತರುಗಳಿಗೆ ಪರ್ಯಾಯವಾಗಿ ಉದ್ದು, ಹೆಸರು ಬೆಳೆಯಲು ಪ್ರೋತ್ಸಾಹ ನೀಡಬೇಕೆಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಆಗ್ರಹಿಸಿದ್ದಾರೆ.