ಬೆಂಗಳೂರು ಹಾಗೂ ಹೊರ ರಾಜ್ಯದಿಂದ ದಾವಣಗೆರೆಗೆ ಬರುವ ವ್ಯಕ್ತಿಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಒಂದು ದಿನಕ್ಕೆ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ, ಬೆಂಗಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಬರುವವರ ಬಗ್ಗೆ ಆತಂಕ ಹೆಚ್ಚಾಗಿದೆ ಎಂದಿದ್ದಾರೆ. ಹಾಗೂ ಈ ಬಗ್ಗೆ ಪ್ರತಿಯೊಂದು ಹಳ್ಳಿಯಲ್ಲಿ ಡಂಗುರ ಸಾರಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ. ದಾವಣಗೆರೆಗೆ ಬೆಂಗಳೂರು ಹಾಗೂ ಹೊರ ರಾಜ್ಯದ ವ್ಯಕ್ತಿಗಳು ಬಂದರೆ, ಅವರಲ್ಲಿ ರೋಗ ಲಕ್ಷಣಗಳು ಕಂಡು ಬಂದರೆ, ತಾಲೂಕು ಆಸ್ಪತ್ರೆಗಳಿಗೆ ತಿಳಿಸಬೇಕಿದೆ. ಕೊರೊನಾ ಪ್ರಕರಣಗಳು ಬೆಂಗಳೂರಿನಲ್ಲಿ ಹೆಚ್ಚಾಗಿದ್ದು, ಸಾಕಷ್ಟು ಮಂದಿ ಬೆಂಗಳೂರಿನಿಂದ ತಮ್ಮ ತಮ್ಮ ಊರಿಗೆ ಮರಳುತ್ತಿದ್ದಾರೆ. ಹೀಗಾಗಿ, ಬೆಂಗಳೂರಿನಿಂದ ಬರುವವರಿಗೆ ಸೋಂಕಿನ ಲಕ್ಷಣಗಳು ಇದ್ದರೆ, ಜಿಲ್ಲೆಯಲ್ಲಿ ಮತ್ತಷ್ಟು ಜನರಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ, ಎಲ್ಲಾ ತಹಶಿಲ್ದಾರ್ ಗಳಿಗೆ ಪತ್ರದ ಮೂಲಕ ಡಿಸಿ ಬೀಳಗಿ ಸೂಚನೆ ನೀಡಿದ್ದಾರೆ.