ಬೆಂಗಳೂರು, ಫೆ.21: ಮಾತೃವಂದನಾ ಯೋಜನೆಯಡಿ ಎರಡನೆ ಹೆರಿಗೆಯಲ್ಲಿ ಹೆಣ್ಣು ಮಗುವಾದರೆ 6 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಡಿ.ಎಸ್.ಅರುಣ್ ಪ್ರಶ್ನೆಗೆ ಉತ್ತರಿಸಿದ ಅವರು, ಮಾತೃವಂದನಾ ಯೋಜನೆಯಡಿ ಮೊದಲ ಹೆರಿಗೆ ಸಂದರ್ಭದಲ್ಲಿ ಸರಕಾರ 5 ಸಾವಿರ ರೂಗಳನ್ನು ಎರಡು ಕಂತುಗಳಲ್ಲಿ ನೀಡುತ್ತಿದ್ದು, ಇದೀಗ ಎರಡನೆ ಹೆರಿಗೆಯಲ್ಲಿ ಹೆಣ್ಣು ಮಗುವಾದರೆ 6 ಸಾವಿರ ರೂಗಳನ್ನು ಒಂದೇ ಕಂತಿನಲ್ಲಿ ನೀಡಲಾಗುತ್ತಿದೆ ಎಂದರು.
ಸ್ತ್ರೀ ಶಕ್ತಿ, ಸಾಂತ್ವಾನ, ಸ್ವಾಧಾರ ಯೋಜನೆಗಳನ್ನು ಸಹ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗಿದೆ ಎಂದ ಅವರು, ಮಹಿಳೆಯರು ಮತ್ತು ಮಕ್ಕಳ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಈ ಬಾರಿಯ ಬಜೆಟ್ ನಲ್ಲಿ ‘ಗೃಹಿಣಿ ಶಕ್ತಿ’ ಯೋಜನೆ ಘೋಷಣೆ ಮಾಡಲಾಗಿದೆ. ಇದರಡಿ, ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು 500 ರೂಪಾಯಿ ಪ್ರೋತ್ಸಾಹ ಧನ ನೀಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಪ್ರಕಟಿಸಿದ್ದು, ಬಜೆಟ್ಗೆ ಅನುಮೋದನೆ ದೊರೆಯುತ್ತಿದ್ದಂತೆ ಪ್ರಕಟಿಸಿರುವ ಹೊಸ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಈ ಬಾರಿ ಒಂದು ಲಕ್ಷ ಮಹಿಳೆಯರಿಗೆ ಗೃಹ ಆದಾರಿತ ಉದ್ಯಮ ಬಗ್ಗೆ ಕೌಶಲ್ಯ ಅಭಿವೃದ್ಧಿ ತರಭೇತಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಸ್ವಾವಲಂಬಿ ಬದುಕಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಅದೇ ರೀತಿ, ಗುಡ್ಡಗಾಡು ಪ್ರದೇಶಗಳಲ್ಲಿ ಗರ್ಭೀಣಿಯರಿಗೆ ಅಂಗನವಾಡಿಗಳಲ್ಲಿ ಮಾತೃಪೂರ್ಣ ಯೋಜನೆಯಡಿ ಬಿಸಿಯೂಟ ಸೇವಿಸಲು ಸಾಧ್ಯವಾಗದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ವಿಶೇಷವಾಗಿ ಆರು ಜಿಲ್ಲೆಗಳಲ್ಲಿ ಫಲಾನುಭವಿಗಳ ಮನೆಗಳಿಗೆ ಆಹಾರ ಧಾನ್ಯವನ್ನು ತೆಗೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada