ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಹೊರಗೆ ಓಡಾಡುತ್ತಿದ್ದ ಎಂಟು ಮಂದಿಯ ಮೇಲೆ ಎಫ್ಐಆರ್ ದಾಖಲಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಸರ್ಕಾರ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿದ ರಾಮನಗರ ತಾಲ್ಲೂಕಿನ 4 ಮಂದಿ ಮತ್ತು ಕನಕಪುರ ತಾಲ್ಲೂಕಿನ 4 ಮಂದಿಯ ವಿರುದ್ಧ ಎರಡು ತಾಲ್ಲೂಕಿನ ದಂಡಾಧಿಕಾರಿಗಳು ಅವರ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೋಂ ಕ್ವಾರಂಟೈನ್ ಗೆ ಒಳಗಾದವರು ನಿಯಮಗಳನ್ನು ಉಲ್ಲಂಘಿಸಿ ಹೊರಗಡೆ ಓಡಾಡುವುದು ಮತ್ತು ಮನೆಯಲ್ಲಿ ಮೊಬೈಲ್ ಬಿಟ್ಟು ಹೋಗುವುದು ಇಲ್ಲವೇ ಇನ್ನಾರಿಗಾದರೂ ಮೊಬೈಲ್ ಕೊಟ್ಟ ಸಂದರ್ಭಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಮಾದರಿ ಮಾರ್ಗಸೂಚಿಗಳ ಅನ್ವಯ ಎಫ್ಐಆರ್ ದಾಖಲಿಸಲಾಗುವುದು ಎಂದು ತಿಳಿಸಲಾಗಿತ್ತು. ಜೊತೆಗೆ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟಿನ್ ಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷ ಎಂ.ಎಸ್ ಅರ್ಚನಾ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.