ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಆನಂದ್ ಬಢೆ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ರಾಜ್ಯ ಸರ್ಕಾರದೊಂದಿಗೆ ಮಾಡಿಕೊಂಡ ಒಪ್ಪಂದದಂತೆ ರಾಜ್ಯದಲ್ಲಿ 150 ಸರ್ಕಾರಿ ಐಟಿಐ ಗಳ ಉನ್ನತೀಕರಣವನ್ನು ಟಾಟಾ ಟೆಕ್ನಾಲಜೀಸ್ ಸಂಸ್ಥೆ ಇತರ ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದೊಂದಿಗೆ ಕೈಗೆತ್ತಿಕೊಂಡಿದ್ದು, ಮೂಲಸೌಕರ್ಯ ಉನ್ನತೀಕರಣ ಬಹುತೇಕ ಪೂರ್ಣಗೊಂಡಿದೆ. ಜೊತೆಗೆ ಐಟಿಐ ಬೋಧಕ ಸಿಬ್ಬಂದಿಗೂ ತರಬೇತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಮುಖ್ಯಮಂತ್ರಿಯವರು ಐಟಿಐಗಳ ಒಟ್ಟಾರೆ ಅಭಿವೃದ್ಧಿಗೆ, ವಿದ್ಯಾರ್ಥಿಗಳಿಗೆ ಕಾಲಕ್ಕೆ ತಕ್ಕ ತರಬೇತಿ, ಶಿಕ್ಷಣ, ಮಾರ್ಗದರ್ಶನ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಒಂದೊಂದು ಬೃಹತ್ ಕೈಗಾರಿಕಾ ಸಂಸ್ಥೆಯವರು ಒಂದೊಂದು ಜಿಲ್ಲೆಯ ಐಟಿಐಗಳ ಅಭಿವೃದ್ಧಿಗೆ ಸಹಯೋಗ ನೀಡಬೇಕೆಂದು ಅಭಿಪ್ರಾಯಪಟ್ಟರು.ಪಾಲಿಟೆಕ್ನಿಕ್ ಗಳಲ್ಲಿಯೂ ಪಠ್ಯಕ್ರಮ ಹಾಗೂ ಇತರ ಮೂಲಸೌಕರ್ಯ ಕಲ್ಪಿಸಲು ಸಹಯೋಗ ನೀಡುವಂತೆ ಟಾಟಾ ಟೆಕ್ನಾಲಜೀಸ್ ಅವರಿಗೆ ಸಲಹೆ ನೀಡಿದರು. ಕೃಷಿ ವಲಯದಲ್ಲಿ ಸಂಶೋಧನೆ ಮತ್ತು ನಾವಿನ್ಯತಾ ಕೇಂದ್ರವನ್ನು ಪ್ರಾರಂಭಿಸಲು ಉತ್ಸುಕತೆ ಟಾಟಾ ಟೆಕ್ನಾಲಜೀಸ್ ಸಂಸ್ಥೆಯವರು ಉತ್ಸುಕತೆ ತೋರಿದರು.ರೈತರಿಗೆ ಕೃಷಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯಿಸುವುದರ ಜೊತೆಗೆ, ಕೊಯ್ಲೋತ್ತರ ನಿರ್ವಹಣೆ, ಕೃಷಿ ಉತ್ಪನ್ನಗಳ ವೈಜ್ಞಾನಿಕ ಸಂಗ್ರಹಣೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.ಜೊತೆಗೆ ರೈತ ಉತ್ಪಾದಕ ಸಂಸ್ಥೆಗಳೊಂದಿಗೆ ಕೈಜೋಡಿಸಿ, ಮಾರುಕಟ್ಟೆ ಸೌಲಭ್ಯ ವಿಸ್ತರಣೆಗೂ ಬೆಂಬಲ ನೀಡುವಂತೆ ತಿಳಿಸಿದರು.ಮೊದಲ ಹಂತದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದರಂತೆ ನಾಲ್ಕು ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿರುವುದಾಗಿ ಆನಂದ್ ಬಢೆ ಅವರು ತಿಳಿಸಿದರು.ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಹಾಗೂ ಟಾಟಾ ಟೆಕ್ನಾಲಜೀಸ್ ನ ಅಧಿಕಾರಿಗಳು ಉಪಸ್ಥಿತರಿದ್ದರು.