ಉತ್ತರಪ್ರದೇಶದ ಲಖೀಂಪುರದಲ್ಲಿ ನಡೆದ ರೈತರ ಮೇಲೆ ಹಲ್ಲೆಯನ್ನು ಖಂಡಿಸಿ ಹಾಗೂ ಕಬ್ಬಿನ ಎಫ್ಆರ್ಪಿ ದರವನ್ನು ಮರುಪರಿಶೀಲಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳು ನಗರದಲ್ಲಿಂದು ಪ್ರತಿಭಟನೆ ನಡೆಸಿದವು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಜಾಥ ನಡೆಸಿ ಕಬ್ಬಿನ ಎಫ್ಆರ್ಪಿ ದರವನ್ನು ಮರುಪರಿಶೀಲಿಸುವಂತೆ ಆಗ್ರಹಿಸಲಾಯಿಸಿದರು
ಇದೇ ವೇಳೆ ಮಾತನಾಡಿದ ಕುರುಬೂರು ಶಾಂತಕುಮಾರ್, ಕಬ್ಬಿನ ಎಫ್ಆರ್ಪಿ ದರವನ್ನು ಕಳೆದ ಎರಡು ವರ್ಷಗಳಿಂದ ಏರಿಕೆ ಮಾಡದೆ ಅನ್ಯಾಯ ಮಾಡಲಾಗುತ್ತಿದೆ. ಕಬ್ಬು ಉತ್ಪಾದನಾ ವೆಚ್ಚ ದ್ವಿಗುಣವಾಗಿದ್ದರೂ ಈಗ ಟನ್ಗೆ 50 ರೂ. ಏರಿಕೆ ಮಾಡಿರುವುದನ್ನು ಪುನರ್ ಪರಿಶೀಲಿಸಬೇಕು. ಕಬ್ಬಿನಿಂದ ಬರುವ ಎಥಿನಾಲ್ ಉತ್ಪನ್ನದ ಲಾಭ ಹಾಗೂ ಉಪ ಉತ್ಪನ್ನಗಳ ಲಾಭಗಳನ್ನು ರೈತರಿಗೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಸಕ್ಕರೆ ಇಳುವರಿ, ತೂಕದಲ್ಲಿ ಮೋಸ, ಕಬ್ಬಿನ ಹಣ ಪಾವತಿಸುವಲ್ಲಿ ವಿಳಂಬ ತಪ್ಪಿಸಲು ಕಠಿಣ ಕ್ರಮ ಕೈಗೊಳ್ಳಬೇಕು. ವಿಳಂಬದ ಹಣ ಪಾವತಿಗೆ ಶೇ.15ರಷ್ಟು ಬಡ್ಡಿ ಸೇರಿಸಿ ಕೊಡಬೇಕು ಎಂದು ಅವರು ಒತ್ತಾಯಿಸಿದರು. ಹೊಸ ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಇರುವ 25 ಕಿ.ಮೀ ಮಿತಿಯನ್ನು ರದ್ದುಗೊಳಿಸಬೇಕು, ಸಕ್ಕರೆ ಕಾರ್ಖಾನೆ ಹಾಗೂ ರೈತರ ನಡುವೆ ಕಾನೂನುಬದ್ದ ದ್ವಿಪಕ್ಷೀಯ ಒಪ್ಪಂದ ಪತ್ರ ಜಾರಿಯಾಗಬೇಕು. ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಕಬ್ಬಿನ ಬಾಕಿ ಹಣವನ್ನು ಕೂಡಲೇ ಕೊಡಿಸಬೇಕು ಎಂದು ಆಗ್ರಹಿಸಿದರು. ಕಳೆದ 19 ದಿನಗಳಿಂದ ಬೀದರ್ನಲ್ಲಿ ರೈತರು ಬಾಕಿ ಹಣಕ್ಕಾಗಿ ಧರಣಿ ನಡೆಸುತ್ತಿದ್ದರು. ಕಾರ್ಖಾನೆಗಳು ಕ್ಯಾರೆ ಎನ್ನುತ್ತಿಲ್ಲ. ಈ ಬಗ್ಗೆ ಯಾವುದೇ ಕ್ರಮ ಜಾರಿಯಾಗಿಲ್ಲ ಎಂದು ಆರೋಪಿಸಿದರು. ನಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಕಷ್ಟು ಹೋರಾಟ ಮಾಡಿದ್ದೇವೆ. ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮುಂದುವರೆಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನಿನ್ನೆ ಉತ್ತರಪ್ರದೇಶದ ಲಖೀಂಪುರದಲ್ಲಿ ರೈತರ ಮೇಲೆ ನಡೆದ ಘಟನೆಯನ್ನು ಖಂಡಿಸಿದ ಅವರು, ಕೇಂದ್ರ ಸರ್ಕಾರ ರೈತರ ಮಾರಣಹೋಮ ಮಾಡಿ ರಾವಣ ರಾಜ್ಯ ನಿರ್ಮಿಸಲು ಹೊರಟಿದೆ ಎಂದು ಹೇಳಿದರು. ಕೃಷಿ ಕಾಯ್ದೆಗಳನ್ನು ವಿರೋಸಿ ದೇಶಾದ್ಯಂತ ರೈತರು ಹೋರಾಟ ಮಾಡುತ್ತಿದ್ದಾರೆ. ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮಾಡುತ್ತಾ ಬಂದಿದೆ. ಈಗ ದಮನಕಾರಿ ನೀತಿ ಅನುಸರಿಸುತ್ತಿದೆ. ನಿನ್ನೆ ನಡೆದ ಗಲಭೆಯಲ್ಲಿ ಮಡಿದ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ನ್ಯಾಯೋಚಿತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು. ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಫ್ರೀಡಂಪಾರ್ಕ್ ಬಳಿ ಪೊಲೀಸರು ತಡೆದರು.