ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಹಾಗಾಗಿ, ವಸತಿ ಶಾಲೆಗಳ ಮಕ್ಕಳಿಗೆ ಬೇಕಾಗುವ ಮೂಲಭೂತ ಸೌಕರ್ಯ ಒದಗಿಸುವತ್ತ ಗಮನಕೊಡಿ. ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಕೆಲಸಗಳು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ವಿಜ್ಞಾನ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಸತಿ, ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿಯಲ್ಲಿ ಬದಲಾವಣೆಯಾಗಬೇಕಿದೆ. ಮಕ್ಕಳಿಗೆ ಬೇಕಾಗಿರುವ ವ್ಯವಸ್ಥೆಗಳಿಗೆ ಹಣ ಖರ್ಚು ಮಾಡಿ ಕಟ್ಟಡ, ಕಾಂಪೌಂಡ್ ನಿರ್ಮಿಸಿ, ಗುತ್ತಿಗೆದಾರರಿಗೆ ದುಡ್ಡು ಮಾಡಿ ಕೋಡೋದು ಬಿಟ್ಟುಬಿಡಿ ಎಂದು ಸಿಟ್ಟಿನಿಂದ ಹೇಳಿದ ಮುಖ್ಯಮಂತ್ರಿಗಳು, ಗುತ್ತಿಗೆದಾರರಿಗೆ ದುಡ್ಡು ಕೊಡುವುದು ಹಿಂದಿನ ಸರ್ಕಾರಗಳ ಬಳುವಳಿ ಎಂದರು.
ವಸತಿ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಗುಣಾತ್ಮಕ ಶಿಕ್ಷಣಕ್ಕೆ ಸರ್ಕಾರ ದುಡ್ಡು ಕೊಡುತ್ತಿದೆ. ಆದರೆ, ಅಲ್ಲಿ ನಮ್ಮ ನಿರೀಕ್ಷೆಯಷ್ಟು ಗುಣಾತ್ಮಕ ಶಿಕ್ಷಣ ಸಿಗುತ್ತಿಲ್ಲ. ಗುತ್ತಿಗೆ ಆಧಾರಿತ ಕೆಲಸ ಮಾಡಿದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲ್ಲ ಎಂದು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.
ಗುಣಾತ್ಮಕ ಶಿಕ್ಷಣ ವ್ಯವಸ್ಥೆ ಮಾಡಲು ಸಮಾಜಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ಕೊಡುತ್ತಿದ್ದೇನೆ. ನೀವು ಅಧಿಕಾರಿಗಳು ಬೆಂಗಳೂರಿನಲ್ಲಿ ಕುಳಿತು ಆಡಳಿತ ಮಾಡುವುದಲ್ಲ. ತಾಲ್ಲೂಕುಗಳಿಗೆ ಹೋಗಿ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಕೆಲಸ ಮಾಡಿ, ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡುವುದನ್ನು ಬಿಡಿ ಎಂದು ಅಧಿಕಾರಿಗಳಿಗೆ ಛಾಟಿ ಬೀಸಿದರು.
ಮಕ್ಕಳ ಶಿಕ್ಷಣಕ್ಕೆ ಸೌಲಭ್ಯ ಒದಗಿಸಲು ಅನುದಾನ ಕೊರತೆ ಇದ್ದರೆ ಪಟ್ಟಿಕೊಡಿ. ನಾನು ಅನುದಾನ ಕೊಡುತ್ತೇನೆ.
ಕಟ್ಟಡ, ಕಾಂಪೌಂಡ್ ಕಟ್ಟಿಸಿ, ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಕಾಮಗಾರಿಗಳ ಅವಶ್ಯಕತೆ ಇಲ್ಲ ಎಂದರು.
ವಸತಿ ಶಾಲೆಗಳಿಗೆ ಪೋಷಕರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡು ಮಕ್ಕಳನ್ನು ಕಳುಹಿಸುತ್ತಾರೆ. ಅದಕ್ಕೆ ತಕ್ಕಂತೆ ಮಕ್ಕಳು ಚೆನ್ನಾಗಿ ಕಲಿತು ಒಳ್ಳೆ ಅಂಕಗಳನ್ನು ಪಡೆಯಬೇಕು. ಈ ರೀತಿಯ ಬದಲಾವಣೆ ಜನಪ್ರತಿನಿಧಿಗಳಿಂದ ಮಾತ್ರ ಆಗಲ್ಲ. ಅಧಿಕಾರಿಗಳೂ ಕೈ ಜೋಡಿಸಬೇಕು. ಬೆಂಗಳೂರಿನಲ್ಲಿ ಕುಳಿತು ಎಲ್ಲವನ್ನೂ ಮಾಡುತ್ತೇವೆ ಎನ್ನುವುದು ಸಾಧ್ಯವಿಲ್ಲ. ಜವಾಬ್ದಾರಿಯಿಂದ ಕೆಲಸ ಮಾಡಿ ಎಂದು ಅಧಿಕಾರಿಗಳು ಹೇಳಿದರು.
ಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ೭೫ ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಜಮೀನು ಖರೀದಿಗೂ ಆರ್ಥಿಕ ನೆರವು ಒದಗಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ, ಸಚಿವ ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಉಪಸ್ಥಿತರಿದ್ದರು.
https://play.google.com/store/apps/details?id=com.speed.newskannada