ನ್ಯಾಯಮೂರ್ತಿ ಕೋ. ಚೆನ್ನಬಸಪ್ಪನವರು ನಿವೃತ್ತ ನ್ಯಾಯಾಧೀಶರು, ಸ್ವಾತಂತ್ರ್ಯ ಮತ್ತು ಏಕೀಕರಣ ಹೋರಾಟಗಾರರು ಮತ್ತು ಕನ್ನಡದ ಪ್ರಸಿದ್ಧ ಬರಹಗಾರರಾಗಿದ್ದವರು.
ಕೋ. ಚೆನ್ನಬಸಪ್ಪನವರು 1922ರ ಫೆಬ್ರವರಿ 27ರಂದು ಬಳ್ಳಾರಿ ಜಿಲ್ಲೆಯ ಆಲೂರಿನ ಸಮೀಪದ ಕಾನಮಡುಗು ಎಂಬಲ್ಲಿ ಜನಿಸಿದರು. ತಂದೆ ವೀರಣ್ಣ. ತಾಯಿ ಬಸಮ್ಮ. ಕಾನಮಡುಗು ಮತ್ತು ಬಳ್ಳಾರಿಯಲ್ಲಿ ಶಾಲಾ ವಿದ್ಯಾಭ್ಯಾಸ ನಡೆಸಿದ ಚೆನ್ನಬಸಪ್ಪನವರು ಅನಂತಪುರದಲ್ಲಿ ಕಾಲೇಜು ವ್ಯಾಸಂಗ ನಡೆಸಿದರು. ವಿದ್ಯಾರ್ಥಿ ದೆಸೆಯಲ್ಲಿದ್ದಾಗ ಸ್ವಾತಂತ್ರ್ಯ ಚಳುವಳಿಗೆ ಧುಮುಕಿ, ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳುವಳಿಯಲ್ಲಿ ವಿದ್ಯಾರ್ಥಿ ಮುಖಂಡರಾಗಿ ಭಾಗವಹಿಸಿ ಸೆರೆಮನೆವಾಸ ಅನುಭವಿಸಿದರು. ಸೆರೆಮನೆಯಿಂದ ಹೊರಬಂದ ನಂತರದಲ್ಲಿ ಬಿ. ಎ ಪದವಿ ಪಡೆದರು. ನಂತರದಲ್ಲಿ ಕಾನೂನು ಪದವಿಯನ್ನೂ, ಚರಿತ್ರೆ ಮತ್ತು ರಾಜ್ಯಶಾಸ್ತ್ರಗಳಲ್ಲಿ ಸ್ನಾತಕೋತ್ತರ ಪದವಿಗಳನ್ನೂ ಪಡೆದರು.
1946ರಲ್ಲಿ ಮುಂಬೈ ಶ್ರೇಷ್ಠ ನ್ಯಾಯಾಲಯದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸತೊಡಗಿದ ಚೆನ್ನಬಸಪ್ಪನವರು, 1965ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡರು. ನಿವೃತ್ತಿಯ ನಂತರದಲ್ಲಿ ಕರ್ನಾಟಕ ಶ್ರೇಷ್ಠ ನ್ಯಾಯಾಲಯದಲ್ಲಿ ವಕೀಲಿ ವೃತ್ತಿ ನಡೆಸುವುದರ ಜೊತೆಗೆ ಹಲವಾರು ಕಾರ್ಮಿಕ ಸಂಘಟನೆಗಳ ಮತ್ತು ಭ್ರಷ್ಟಾಚಾರ ನಿರ್ಮೂಲನ ಸಮಿತಿಯ ಅಧ್ಯಕ್ಷತೆ ಮುಂತಾದ ಹಲವಾರು ಜವಾಬ್ಧಾರಿಗಳನ್ನು ನಿರ್ವಹಿಸಿದರು.
ಅರವಿಂದಾಶ್ರಮದ ನಿಕಟವರ್ತಿಗಳಾದ ಚೆನ್ನಬಸಪ್ಪನವರು ಕರ್ನಾಟಕ ವಿಭಾಗದ ಅರವಿಂದಾಶ್ರಮವನ್ನು ಪ್ರಾರಂಭಿಸಿದರು. ಪ್ರಾರಂಭದಿಂದಲೂ ಸಾಹಿತ್ಯದ ಗೀಳು ಹಚ್ಚಿಕೊಂಡ ಇವರು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಬರೆದ ಲೇಖನಗಳು ಅಪಾರ. ಕನ್ನಡಪ್ರಭ ಪತ್ರಿಕೆಯಲ್ಲಿ ಮೂಡಿಬಂದ ‘ನ್ಯಾಯಾಧೀಶರ ನೆನಪುಗಳು’ ಮತ್ತು ಪ್ರಜಾಮತ ವಾರಪತ್ರಿಕೆಯಲ್ಲಿ ಪ್ರಕಟಗೊಂಡ ‘ನ್ಯಾಯಾಲಯದಲ್ಲಿ ಸತ್ಯ ಕಥೆಗಳು’ ಅಂದಿನ ದಿನಗಳಲ್ಲಿ ಪ್ರಖ್ಯಾತಿ ಪಡೆದಿದ್ದವು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: