ಲಾಕ್ ಡೌನ್ನಿಂದಾಗಿ ತಮ್ಮ ಕುಟುಂಬ ಸೇರಲಾಗದೆ ಬಾಕಿಯಾಗಿರುವವರಿಗೆ ಅಂತರ್ ಜಿಲ್ಲಾ ಪ್ರಯಾಣಕ್ಕೆ ಅನುಮತಿ ನೀಡುವ ಸಂಬಂಧ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕೃಷಿ ಕಾರ್ಯ ಕೈಗೊಳ್ಳಲು ಅಥವಾ ತಮ್ಮ ಕೆಲಸದ ಸ್ಥಳಗಳಿಗೆ ತಲುಪುವ ಸಲುವಾಗಿ ಅವರನ್ನು ಸ್ವಗ್ರಾಮಗಳಿಗೆ ತಲುಪಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಂದಲೂ ವಲಸೆ ಕಾರ್ಮಿಕರು ತಮ್ಮ ಜಿಲ್ಲೆಗೆ ತೆರಳಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಈಗಾಗಲೇ ಮಂಗಳೂರು ಹೊರತುಪಡಿಸಿ ಉಳಿದ ತಾಲೂಕುಗಳಿಂದ ವಲಸೆ ಕಾರ್ಮಿಕರನ್ನು ಕಳುಹಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 4000 ಮಂದಿ ಈಗಾಗಲೇ ತೆರಳಿದ್ದಾರೆ. ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಇನ್ನು 3-4 ದಿನಗಳೊಳಗೆ ಇದು ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.