ವಿಧಾನಸಭೆ ಚುನಾವಣೆ ಕಣ ಅಂತಿಮಗೊಂಡಿದೆ. ಫೆಬ್ರವರಿ 14ರಂದು 40 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 301 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.ಎಐಸಿಸಿ ಗೋವಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯದ 40 ಸ್ಥಾನಗಳ ಪೈಕಿ 37ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೂರು ಸ್ಥಾನಗಳನ್ನು ಗೋವಾ ಫಾರ್ವರ್ಡ್ ಪಕ್ಷಕ್ಕೆ ಕಾಂಗ್ರೆಸ್ ಬಿಟ್ಟುಕೊಟ್ಟಿದೆ.ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಪಿ. ಪಿದಂಬರಂ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂತಾದ ನಾಯಕರು ಸ್ಟಾರ್ ಪ್ರಚಾರಕರಾಗಿದ್ದಾರೆ.ಪ್ರಿಯಾಂಕಾ ವಾದ್ರಾ, ದಿನೇಶ್ ಗುಂಡೂರಾವ್, ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಜೋಂಡಕರ್, ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್ದೀಪ್ ಸುರ್ಜೇವಾಲ, ಕೇರಳದ ಮಾಜಿ ಮುಖ್ಯಮಂತ್ರಿ ಓಮನ್ ಚಾಂಡಿ, ಅಶೋಕ್ ಚೌವ್ಹಾಣ್, ಸಚಿನ್ ಪೈಲೆಟ್ ಮುಂತಾದವರು ಪ್ರಚಾರ ನಡೆಸಲಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಾಜಿ ಸಚಿವ ಶಶಿ ತರೂರ್, ಎಚ್. ಕೆ. ಪಾಟೀಲ್, ಎಂ. ಬಿ. ಪಾಟೀಲ್, ಯಶೋಮತಿ ಠಾಕೂರ್, ಆರ್. ವಿ. ದೇಶಪಾಂಡೆ, ಸತೀಶ್ ಜಾರಕಿಹೊಳಿ, ಕನ್ಹಯ್ಯ ಕುಮಾರ್, ಬಿ. ವಿ. ಶ್ರೀನಿವಾಸ್ ಸೇರಿದಂತೆ ಗೋವಾದ ಸ್ಥಳೀಯ ನಾಯಕರು ಸಹ ಪ್ರಚಾರ ನಡೆಸಲಿದ್ದಾರೆ.ರಾಹುಲ್ ಗಾಂಧಿ ಭೇಟಿ ಶುಕ್ರವಾರ ರಾಹುಲ್ ಗಾಂಧಿ ಗೋವಾ ಪ್ರವಾದಲ್ಲಿದ್ದಾರೆ. ಇಂದು ಅವರು ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರದ ಪ್ರಮುಖರು, ಅಂಗನಾಡಿ ಕಾರ್ಯಕರ್ತರ ಜೊತೆ ಸಂವಾದ ನಡೆಸಲಿದ್ದಾರೆ.ಗೋವಾ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಎಲ್ಲಾ 37 ಅಭ್ಯರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಅಭ್ಯರ್ಥಿಗಳು ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಕ್ಷ ನಿಷ್ಠೆಯ ಪ್ರತಿಜ್ಞೆಯನ್ನು ಸಹ ಮಾಡಲಿದ್ದಾರೆ.ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಈಗಾಗಲೇ ರಾಜ್ಯದಲ್ಲಿ ಒಂದು ಸುತ್ತಿನ ಪ್ರಚಾರ ನಡೆಸಿದ್ದಾರೆ. ಎಎಪಿ ಅಭ್ಯರ್ಥಿಗಳ ಪರವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಚಾರ ನಡೆಸಿದ್ದಾರೆ. ಕಳೆದ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಪ್ರಚಾರ ನಡೆಸಿ ಚುನಾವಣಾ ಪ್ರಚಾರದ ಕಾವು ಹೆಚ್ಚಿಸಿದ್ದಾರೆ.ಗೋವಾ ಚುನಾವಣೆ ಕುರಿತು ಇತ್ತೀಚೆಗೆ ಬಂದ ಚುನಾವಣಾ ಪೂರ್ವ ಸಮೀಕ್ಷೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಿದೆ. ಪಕ್ಷ ಚುನಾವಣೆಯಲ್ಲಿ 17 ರಿಂದ 21 ಸೀಟು ಪಡೆಯಬಹುದು ಎಂದು ಸಮೀಕ್ಷೆ ವರದಿ ಹೇಳಿದೆ.ಇದರಿಂದಾಗಿ ರಾಜ್ಯದ ಕಾಂಗ್ರೆಸ್ ನಾಯಕರ ಉತ್ಸಾಹ ಹೆಚ್ಚಿದೆ. ಕರ್ನಾಟಕ, ಮಹಾರಾಷ್ಟ್ರದ ವಿವಿಧ ನಾಯಕರನ್ನು ಕರೆತಂದು ವಿಧಾನಸಭಾವಾರು ಉಸ್ತುವಾರಿ ನೀಡಿ ಪ್ರಚಾರ ಮಾಡಲಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಅಧಿಕಾರ ಹಿಡಿಯಲೇ ಬೇಕು ಎಂದು ಕಾಂಗ್ರೆಸ್ ನಾಯಕರು ತಂತ್ರ ರೂಪಿಸುತ್ತಿದ್ದಾರೆ.2017ರ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿ 13 ಸ್ಥಾನಗಳಲ್ಲಿ ಮಾತ್ರ ಗೆದ್ದಿತ್ತು. ಆದರೆ ಇತರ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತ್ತು.ಈ ಬಾರಿ ಕಾಂಗ್ರೆಸ್ ಅಧಿಕಾರ ಹಿಡಿಯುವ ಉತ್ಸಾಹದಲ್ಲಿದ್ದು, ಟಿಎಂಸಿ, ಶೀವಸೇನೆ ಮತ್ತು ಎನ್ಸಿಪಿ ನೀಡಿದ್ದ ಮೈತ್ರಿಕೂಟ ರಚನೆ ಆಹ್ವಾನವನ್ನು ತಿರಸ್ಕರಿಸಿ 37 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada