ರಾಜ್ಯದಲ್ಲಿ ಇನ್ನು ಮುಂದೆ ವಸತಿ ಶಾಲೆಗಳ ಪ್ರವೇಶಾತಿಯಲ್ಲಿ ಶೇ.25ರಷ್ಟು ಸೀಟುಗಳನ್ನು ಸ್ಥಳೀಯ ಮಕ್ಕಳಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 135 ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಈ ವಸತಿ ಶಾಲೆಗಳು ಇರುವ ಗ್ರಾಮಗಳ ಮಕ್ಕಳಿಗೆ ಇದುವರೆಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿರಲಿಲ್ಲ. ಕೇವಲ ವಸತಿ ಶಾಲೆಯನ್ನು ಹೊರಗಿನಿಂದ ನೋಡಿ ಸಮಾಧಾನಪಡಬೇಕಾಗಿತ್ತು. ಆದರೆ ಇದುವರೆಗೂ ಇದ್ದ ಕಾನೂನನ್ನು ಬದಲಿಸಿ ಇನ್ನು ಮುಂದೆ ವಸತಿ ಶಾಲೆಗಳು ಇರುವ ತಾಲೂಕಿನ ಸ್ಥಳೀಯ ಮಕ್ಕಳಿಗೆ ಶೇ. 25 ರಷ್ಟು ಸೀಟುಗಳನ್ನು ನೀಡಲು ನಿರ್ಧರಿಸಲಾಗಿದೆ. ಬಡ ಮಕ್ಕಳು ವ್ಯಾಸಂಗ ಮಾಡಲು ಉತ್ತಮ ಮೂಲಭೂತ ಸೌಕರ್ಯ ಇರುವಂತಹ ಕಟ್ಟಡ ಇರಬೇಕು. ವಾಸಕ್ಕೆ ಉತ್ತಮ ವಾತಾವರಣ ಇರಬೇಕು ಎನ್ನುವ ಕಾರಣಕ್ಕೆ ನೂತನವಾಗಿ ವಸತಿ ಶಾಲೆಗಳ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.