ಬೆಂಗಳೂರು, ಏ.16- ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿರುವ ಜಾತ್ಯತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ- ಗಂಗಾ ರಥಯಾತ್ರೆ ಆರಂಭವಾಗಿದೆ.
ಇದರೊಂದಿಗೆ ಮುಂಬರುವ ವಿಧಾನಸಭೆ ಚುನಾವಣೆ ಪ್ರಚಾರವನ್ನು ಜೆಡಿಎಸ್ ಪ್ರಾರಂಭಿಸಿದೆ. ಜನತಾ ಜಲಧಾರೆ ಕಾರ್ಯಕ್ರಮದ ಹೊಣೆಯನ್ನು ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳಿಗೆ ನೀಡಿ ಯಶಸ್ವಿಗೊಳಿಸುವ ನಿರ್ದೇಶನ ನೀಡಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯದ 15 ಜೀವ ನದಿಗಳ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಕಾರ್ಯ ಏಕಕಾಲದಲ್ಲಿ ನಡೆಯಿತು.
ವೇದ ಮಂತ್ರ ಘೋಷಣೆ, ವಿಶೇಷ ಪೂಜೆ, ಮಂಗಳ ವಾದ್ಯ, ಕಲಶ ಪೂಜೆ, ಪಕ್ಷದ ಕಾರ್ಯಕರ್ತೆಯರಿಂದ ಕಲಶ ಮೆರವಣಿಗೆ, ಕಲಾ ತಂಡಗಳ ಮೆರವಣಿಗೆ ನಡುವೆ ಪುಣ್ಯಜಲವನ್ನು ಸಂಗ್ರಹ ಮಾಡಿಕೊಳ್ಳಲಾಗಿದೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರದಲ್ಲಿ ಕಾವೇರಿ ಜಲ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದಲ್ಲಿ ಜಲಸಂಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಕುಮಾರಸ್ವಾಮಿ, ಯಲಗೂರು ಆಂಜನೇಯ ದೇವಸ್ಥಾನದಲ್ಲಿ ಆಂಜನೇಯ ಸ್ವಾಮಿ ದೇವರ ದರ್ಶನ ಪಡೆದು ಜಲದಾರೆ ಕಾರ್ಯಕ್ರಮಕ್ಕೆ ಯಾವುದೇ ವಿಘ್ನಗಳು ಬಾರದಂತೆ ಪೂಜೆ ಸಲ್ಲಿಸಿದರು. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಸನ ಜಿಲ್ಲೆಯ ಹೇಮಾವತಿ ನದಿಯಲ್ಲಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ತದ ಉತ್ತರ ಪಿನಾಕಿನಿ ನದಿಯಲ್ಲಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಮೇಕೆದಾಟು ನಲ್ಲಿ ಕಾವೇರಿ ನದಿ ನೀರು ಸಂಗ್ರಹ ಮಾಡಿದರು.
ಮಾಂಜ ನದಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್, ಭೀಮಾ ನದಿಯಲ್ಲಿ ನಾಗನಗೌಡ ಕಂದಕೂರ, ತುಂಗಭದ್ರಾ ಜಲಾಶಯದಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ರಾಜ ವೆಂಕಟಪ್ಪ ನಾಯಕ, ಮಾಜಿ ಸಚಿವ ಎನ್.ಎಂ.ನಬಿ, ಕೊಟ್ಟಿಗೆಹಾರ ಬಳಿಯ ಹೇಮಾವತಿ ನದಿಯಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಮಾಜಿ ಶಾಸಕ ವೈ ಎಸ್ ವಿ ದತ್ತಾ, ಕಾಳಿ ನದಿಯಲ್ಲಿ ಗಣಪಯ್ಯ ಹೆಗಡೆ, ಶಶಿ ಭೂಷಣ ಹೆಗಡೆ, ಯೋಗೇಶ್ ಶೆಟ್ಟಿ, ಸುಧಾಕರ್ ಶೆಟ್ಟಿ, ಸೌಪರ್ಣಿಕಾ ನದಿಯಲ್ಲಿ ಯೋಗೇಶ್ ಶೆಟ್ಟಿ,
ತಲಕಾವೇರಿಯಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್, ಕಬಿನಿ ನದಿಯಲ್ಲಿ ಶಾಸಕರಾದ ಅಶ್ವಿನ್ ಕುಮಾರ್, ಮಂಜೇಗೌಡ ಹಾಗೂ ಚಿಕ್ಕಣ್ಣ, ಎತ್ತಿನಹೊಳೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಶಾಸಕರಾದ ಶಿವಲಿಂಗೇಗೌಡ, ಲಿಂಗೇಶ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ಥದಲ್ಲಿ ಯುವ ಜನತಾ ದಳದ ಸಾರಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಅವರ ಜತೆಯಲ್ಲಿ ಶಾಸಕರಾದ ಕೆ.ಎಂ.ಕೃಷ್ಣಾರೆಡ್ಡಿ, ಗೋವಿಂದ ರಾಜು ಅವರುಗಳು ಜಲ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಮೆ 8ರವರೆಗೂ ನಡೆಯಲಿರುವ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 94 ಕಡೆ ಜಲ ಸಂಗ್ರಹ ಮಾಡಲಾಗುತ್ತದೆ.
ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತದ ಸರ್ಕಾರ ಸಿಕ್ಕಿದರೆ ಐದೇ ವರ್ಷಗಳಲ್ಲಿರಾಜ್ಯದ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಜನತಾ ಜಲಧಾರೆ ನನ್ನ ರಾಜಕೀಯ ಜೀವನದ ಅತ್ಯಂತ ಮಹತ್ವಾಕಾಂಕ್ಷೆಯ ಕಾರ್ಯಕ್ರಮ. ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಕಳೆದ 75 ವರ್ಷಗಳಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವ ಏಕೈಕ ಗುರಿಯೊಂದಿಗೆ ಜಲಧಾರೆ ಹಮ್ಮಿಕೊಂಡಿರುವುದಾಗಿ ಹೇಳಿದ್ದಾರೆ.
ರಾಜ್ಯದ 180ಕ್ಕೂ ಹೆಚ್ಚು ವಿಧಾನಸಭೆ ಕ್ಷೇತ್ರಗಳಲ್ಲಿ ಜಲಧಾರೆಯ ಗಂಗಾ ರಥಗಳು ಹಾದು ಹೋಗಲಿವೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ 15 ಕಡೆಗಳಲ್ಲಿ ಪಕ್ಷದ ನಾಯಕರೆಲ್ಲರೂ ಜಲ ಸಂಗ್ರಹ ಮಾಡುವ ನೇರ ದೃಶ್ಯಾವಳಿ ನೋಡಲು ಜೆಪಿ ಭವನದಲ್ಲಿ ಬೃಹತ್ ಡಿಜಿಟಲ್ ಪರದೆ ಅಳವಡಿಸಲಾಗಿತ್ತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada