ಹುಬ್ಬಳ್ಳಿ, ಏ.18- ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಲ್ಲು ತೂರಾಟ, ದಾಂಧಲೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದರು. ಗಲಭೆ ಕುರಿತು ಮಹಾನಗರ ಪೊಲೀಸ್ ಆಯುಕ್ತ ಲಾಭೂರಾಮ ಅವರಿಂದ ಮಾಹಿತಿ ಪಡೆದರು.
ನಂತರ ಕೆಲ ಸಂಘಟನೆಗಳ ಪ್ರಮುಖರು ಗೃಹ ಸಚಿವರನ್ನು ಭೇಟಿಯಾಗಿ ಪೊಲೀಸ್ ಠಾಣೆ, ದೇವಸ್ಥಾನ, ಆಸ್ಪತ್ರೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಭಯದ ವಾತಾವರಣ ಸೃಷ್ಟಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪೊಲೀಸರು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ. ಈಗಾಗಲೇ ಗಲಭೆಯಲ್ಲಿ ಪಾಲ್ಗೊಂಡಿದ್ದವರನ್ನು ಗುರುತಿಸಿ ಬಂಸಲಾಗುತ್ತಿದೆ. ನಗರದಲ್ಲಿ ಶಾಂತಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಎಲ್ಲರೂ ಶಾಂತಿ ಕಾಪಾಡುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಸಭೆ ನಂತರ ಸುದ್ದಿಗಾರರಗೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಕಲ್ಲು ತೂರಾಟ ಮಾಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪರೆಡ್ಡಿ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆಯಲಿದೆ.
ಪ್ರಕರಣದಲ್ಲಿ ಪಾಲ್ಗೊಂಡಿದ್ದವರು ಯಾವ ಮತೀಯ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಗಲಭೆ ಹಿನ್ನೆಲೆ ಏನು ಎನ್ನುವ ಸಂಪೂರ್ಣ ತನಿಖೆಯಾಗಲಿದೆ. ಕಾನೂನು ಕೈಗೆತ್ತಿಕೊಳ್ಳುವವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada