ಬೆಂಗಳೂರು: ರಾಜ್ಯದಲ್ಲಿ 6,500 ಶಾಲಾ ಕಟ್ಟಡಗಳನ್ನು ಈ ವರ್ಷವೇ ನಿರ್ಮಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಆ ಮೂಲಕ ಶಿಕ್ಷಣಕ್ಕೆ ಶಕ್ತಿ ತುಂಬುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೊದಲಿಯಾರ್ ಸೇವಾ ಸಂಘದ ವಜ್ರಮಹೋತ್ಸವ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಮೂಲ ಸವಲತ್ತು ಒದಗಿಸಲು ಆದ್ಯತೆ ನೀಡಲಾಗಿದೆ. ಸರ್ಕಾರದ ಜತೆಗೆ ಸಮುದಾಯದ ಸಹಭಾಗಿತ್ವವೂ ಅಷ್ಟೇ ಮುಖ್ಯವಾಗಿದೆ ಎಂದರು.
ನಗರ ಪ್ರದೇಶದಲ್ಲಿ ಶಾಲಾ ಶಿಕ್ಷಣ ವ್ಯವಸ್ಥೆ ಬಹುದೊಡ್ಡ ಸಮಸ್ಯೆ ಎದುರಿಸುತ್ತಿದೆ. ಒಂದೆಡೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದರೆ, ಮತ್ತೊಂದೆಡೆ ಖಾಸಗಿ ಶಾಲೆಗಳ ಶುಲ್ಕ ದುಬಾರಿಯಾಗಿದೆ. ಇದರಿಂದ ನಗರಗಳ ಬಡವರು ಮತ್ತು ಮಧ್ಯಮವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಿಕ್ಕಟ್ಟು ಬಗೆಹರಿಸಲು ಸರ್ಕಾರದ ಜತೆಗೆ ವಿವಿಧ ಸಮುದಾಯಗಳ ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಬೊಮ್ಮಾಯಿ ಕರೆ ನೀಡಿದರು.
ಮೌಲಿಕ, ನೈತಿಕ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂದಿರುವ ಮೊದಲಿಯಾರ್ ಸೇವಾ ಸಂಘ ಈ ವಿಷಯದಲ್ಲಿ ಮೇಲ್ಪಂಕ್ತಿಯಾಗಬೇಕು. ಪರಿಶ್ರಮ, ಬುದ್ಧಿವಂತಿಕೆ ಹಾಗೂ ವೈಜ್ಞಾನಿಕ ಮನೋಭಾವ ಹೊಂದಿರುವ ಮೊದಲಿಯಾರ್ ಸಮುದಾಯವು ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ನಡೆಸುತ್ತಿದ್ದು, ನೆಲೆಸಿರುವ ರಾಜ್ಯದ ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೀಡಿದೆ ಎಂದು ಸಿಎಂ ಬೊಮ್ಮಾಯಿ ಪ್ರಶಂಸಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada