ಜಿಎಸ್ ಟಿ ಆರಂಭವಾದಾಗಲೇ ಆಹಾರ ಪದಾರ್ಥಗಳು ಪ್ಯಾಕೇಜ್ ಆಗಿದ್ದರೂ ಅವುಗಳನ್ನು ಜಿಎಸ್ ಟಿಯಿಂದ ಹೊರಗಿಡಬೇಕು ಎಂದು ನಾವು ಪ್ರತಿಪಾದನೆ ಮಾಡಿದ್ದೇವೆ. ಈ ಬಗ್ಗೆ ಚರ್ಚೆ ಮಾಡಿದ ನಂತರವಷ್ಟೇ ಸಾಮಾನ್ಯ ವರ್ಗದವರು ಬಳಸುವ ಆಹಾರ ಪದಾರ್ಥ ಹೊರಗಿಡಬೇಕು ಎಂದು ತೀರ್ಮಾನಿಸಲಾಗಿತ್ತು.
ಆದರೆ ಈಗ ಇವುಗಳನ್ನು ಬದಲಾವಣೆ ಮಾಡುತ್ತಿರುವುದು ಆಶ್ಚರ್ಯಕರ ವಿಚಾರವಾಗಿದೆ. ಈ ಆಹಾರ ಪದಾರ್ಥಗಳನ್ನು ತೆರಿಗೆ ವ್ಯಾಪ್ತಿಗೆ ತೆಗೆದುಕೊಂಡು ಬಂದರೂ ಕೂಡ ಸರ್ಕಾರಕ್ಕೆ ಇದರಿಂದ ದೊಡ್ಡ ಆದಾಯ ಬರುವುದಿಲ್ಲ. ಈ ತೆರಿಗೆ ಸರಿಯಾಗಿ ಪಾವತಿ ಮಾಡಲಾಗುತ್ತಿದೆಯೇ ಇಲ್ಲವೇ ಎಂದು ತೆರಿಗೆ ಅಧಿಕಾರಿಗಳಿಂದ ಪರಿಶೀಲನೆ ನಡೆಸಲು ಸಾಧ್ಯವಾಗುವುದಿಲ್ಲ. ಇದರಿಂದ ಲಾಭ ನಷ್ಟ ಹಾಕಿದ ನಂತರವಷ್ಟೇ ಇವುಗಳನ್ನು ತೆರಿಗೆ ವ್ಯಾಪ್ತಿಯಿಂದ ಬಿಡುವುದು ಉತ್ತಮ ಎಂದು ತೀರ್ಮಾನಿಸಲಾಗಿತ್ತು.
ಸರ್ಕಾರ ದೊಡ್ಡ ಹಂತದಲ್ಲಿ ಸಂಪನ್ಮೂಲ ಸೋರಿಕೆಯಾಗುತ್ತಿರುವ ಕಡೆ ಗಮನಹರಿಸಬೇಕು. ದೊಡ್ಡವರು ತೆರಿಗೆ ಕಟ್ಟುತ್ತಿಲ್ಲ, ಅವರ ಬದಲಾಗಿ ಬಡಪಾಯಿಗಳ ಮೇಲೆ ಹೊರೆ ಹಾಕಿ ನಷ್ಟ ಭರಿಸಲು ಮುಂದಾಗಿರುವುದು, ಬಡವರ ರಕ್ಷಣೆ ಮಾಡಬೇಕು ಎಂಬ ಸ್ವತಂತ್ರ ಭಾರತ ಸಿದ್ಧಾಂತವನ್ನೇ ಬುಡಮೇಲು ಮಾಡುವ ಪ್ರಯತ್ನವಾಗಿದೆ. ಬಡವರ ಮೇಲೆ ಹೆಚ್ಚಿನ ತೆರಿಗೆ ಹಾಕಿ, ಶ್ರೀಮಂತರು ಕಟ್ಟುವ ಕಾರ್ಪೋರೇಟ್ ತೆರಿಗೆಯನ್ನು ಶೇ.30ರಿಂದ ಶೇ.22ಕ್ಕೆ, ಶೇ.25ರಿಂದ ಶೇ.15ಕ್ಕೆ ಇಳಿಸಿದ್ದಾರೆ. ನೂರಾರು ಕೋಟಿ ವ್ಯವಹಾರ ಮಾಡುವವರ ಮೇಲೆ ತೆರಿಗೆ ಇಳಿಸಿ, ಅಲ್ಲಿನ ನಷ್ಟವನ್ನು ಬಡವರು ಬಳಸುವ ಪದಾರ್ಥಗಳ ಮೇಲೆ ಹಾಕುತ್ತಿರುವುದು ದೇಶದ ಸಂವಿಧಾನ, ಸಮಾಜದ ಆಶಯಕ್ಕೆ ತದ್ವಿರುದ್ಧವಾಗಿದೆ.ಇನ್ನು ಕಂಪನಿಗಳು ಈ ತೆರಿಗೆ ಹೊರೆಯನ್ನು ಗ್ರಾಹಕರ ಮೇಲೆ ಹಾಕದಂತೆ ಕಂಪನಿಗಳಿಗೆ ಸೂಚಿಸಲಾಗುವುದು ಎಂಬ ಮುಖ್ಯಮಂತ್ರಿಗಳ ಸಮರ್ಥನೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಜಿಎಸ್ ಟಿ ಆರಂಭವಾದಾಗಿನಿಂದಲೂ ಈ ಕತೆ ಕೇಳುತ್ತಲೇ ಇದ್ದೇವೆ. ಕಂಪನಿಗಳು ಪದಾರ್ಥ ಖರೀದಿ ಮಾಡುವಾಗ ಕಟ್ಟುವ ತೆರಿಗೆಯನ್ನು ಇನ್ ಪುಟ್ ಟ್ಯಾಕ್ಸ್ ಎಂದು ಮತ್ತೆ ಅವರಿಗೆ ಮರುಪಾವತಿ ಮಾಡಲಾಗುತ್ತದೆ. ಹೀಗಾಗಿ ಕಂಪನಿಗಳು ತೆರಿಗೆ ಹೊರೆಯನ್ನು ಸಂಪೂರ್ಣವಾಗಿ ಗ್ರಾಹಕರ ಮೇಲೆ ಹಾಕುವ ಅಗತ್ಯವಿಲ್ಲ.
ಆದರೆ, ಜಿಎಸ್ ಟಿ ಜಾರಿ ಬಂದಾಗಿನಿಂದ ಯಾವ ಕಂಪನಿಗಳು ತಮಗೆ ಸಿಗುತ್ತಿರುವ ಲಾಭವನ್ನು ಗ್ರಾಹಕರಿಗೆ ವರ್ಗಾವಣೆ ಮಾಡಿಲ್ಲ. ಇಂತಹ ಕಂಪನಿಗಳ ಮೇಲೆ ಸರ್ಕಾರವು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಕಂಪನಿಗಳು ಸರ್ಕಾರಕ್ಕೆ ಕಟ್ಟುವ ತೆರಿಗೆ ಹಾಗೂ ಕಂಪನಿಗೆ ಮರುಪಾವತಿಯಾಗುವ ತೆರಿಗೆ ಎರಡನ್ನೂ ಗ್ರಾಹಕನಿಂದಲೇ ವಸೂಲಿ ಮಾಡಲಾಗುತ್ತಿದೆ.
ಒಂದು ಕಡೆ ಕಂಪನಿಗಳು ಲಾಭ ಹಾಗೂ ಅಧಿಕ ಲಾಭ ಎರಡನ್ನೂ ಜನಗಳಿಂದಲೇ ವಸೂಲಿ ಮಾಡಲಾಗುತ್ತಿದೆ. ಮತ್ತೊಂದು ಕಡೆ ಜನರು ಕಂಪನಿಯ ಲಾಭ, ಮರು ಪಾವತಿಯ ತೆರಿಗೆ ಲಾಭ ಹಾಗೂ ಸರ್ಕಾರಕ್ಕೆ ತೆರಿಗೆ ಈ ಮೂರರ ಹೊರೆಯನ್ನು ಹೊರಬೇಕಿದೆ. ಈ ವಾಸ್ತವಾಂಶ ಮುಖ್ಯಮಂತ್ರಿಗಳಿಗೆ ಸ್ಪಷ್ಟವಾಗಿ ತಿಳಿದಿದೆ. ಈ ವಿಚಾರವನ್ನು ಮುಚ್ಚಿ ಹಾಕಲು ಜನರನ್ನು ತಪ್ಪುದಾರಿಗೆ ಎಳೆಯಲು ಸುಳ್ಳು ಹೇಳುತ್ತಿದ್ದಾರೆ. ಇದು ದುರಾದೃಷ್ಟದ ವಿಚಾರ.’ ಎಂದು ವಿವರಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: