ಉಡುಪಿ, ಡಿ.26: ಕೇಂದ್ರ ಮತ್ತು ರಾಜ್ಯ ಸರಕಾರಿ ವೇತನದಲ್ಲಿನ ವ್ಯತ್ಯಾಸ ಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರಿ ನೌಕರರ ಬಹು ಬೇಡಿಕೆಯ 7ನೆ ವೇತನ ಆಯೋಗವು 2022ರ ಜುಲೈ ತಿಂಗಳಲ್ಲಿ ಜಾರಿಯಾಗಲಿದ್ದು, ಈ ಬಗ್ಗೆ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ತಿಳಿಸಿದ್ದಾರೆ.
ಉಡುಪಿಯ ಹೋಟೆಲ್ ಮಣಿಪಾಲ ಇನ್ನಲ್ಲಿ ರವಿವಾರ ನಡೆದ ಜಿಲ್ಲಾ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತಿದ್ದರು.
ಸರಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯು ಶೀಘ್ರದಲ್ಲಿ ಜಾರಿಯಾಗಲಿದ್ದು, 7ನೆ ವೇತನ ಆಯೋಗ ರಚನೆ ಕುರಿತಂತೆ ಜನವರಿಯಿಂದ ವಿವಿಧ ರೀತಿಯ ಪ್ರಯತ್ನಗಳನ್ನು ಸಂಘ ಮಾಡಲಿದೆ. ಈ ಸಂದರ್ಭದಲ್ಲಿ ಎಲ್ಲಾ ನೌಕರರು ಸಂಘ ನೀಡುವ ಸೂಚನೆಗಳನ್ನು ಪಾಲಿಸುವುದರ ಮೂಲಕ, ಕೇಂದ್ರ ಸರಕಾರಿ ನೌಕರರಿಗೆ ಸಮಾನವಾದ ವೇತನವನ್ನು ರಾಜ್ಯ ಸರಕಾರಿ ನೌಕರರು ಪಡೆಯಲು ಸಂಘಟಿತರಾಗಿ ಹೋರಾಡಬೇಕೆಂದರು.
ಏಳನೆ ವೇತನ ಆಯೋಗ ಜಾರಿ ನಂತರ ಎನ್ಪಿಎಸ್ ರದ್ದುಗೊಳಿಸುವ ಕುರಿತಂತೆ ಸಂಘ ಕಾಯೋನ್ಮುಖವಾಗಲಿದ್ದು, ಸರಕಾರಿ ನೌಕರರ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ಸಂಘವು ಸದಾ ಬ್ದವಾಗಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಎಸೆಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಿಲ್ಲಾ ಸರಕಾರಿ ನೌಕರರ ಮಕ್ಕಳನ್ನು ಹಾಗೂ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.
ಉಡುಪಿ ಜಿಲ್ಲಾ ಕಾರಾಗೃಹದ ಅಧೀಕ್ಷಕ ಶ್ರೀನಿವಾಸ್, ಹೋಟೆಲ್ ಮಣಿಪಾಲ ಇನ್ನ ವ್ಯವಸ್ಥಾಪಕ ನಿರ್ದೇಶಕ ಇಬ್ರಾಹಿಂ ಸಾಹೇಬ್, ಜಿಲ್ಲಾ ಸರಕಾರಿ ನೌಕರರ ಸಂಘದ ಖಜಾಂಚಿ ಶರೀಫ್ ಮರೋಣ, ಉಪಾಧ್ಯಕ್ಷರಾದ ದೇವರಾಜ ಪಾಣ, ಸುಭಾಶ್ಚಂದ್ರ ಹೆಗ್ಡೆ, ಪ್ರಶಾಂತ್ ಶೆಟ್ಟಿ, ಸಂಘದ ಕುಂದಾಪುರ ತಾಲೂಕು ಅಧ್ಯಕ್ಷ ದಿನಕರ ಶೆಟ್ಟಿ, ಕಾರ್ಕಳ ಅಧ್ಯಕ್ಷ ಜೋಕಿಂ ಪಿಂಟೋ, ಹೆಬ್ರಿ ಅಧ್ಯಕ್ಷ ಹರೀಶ್ ಪೂಜಾರಿ, ಕಾಪು ಅಧ್ಯಕ್ಷ ನಾಗೇಶ್ ಬಿಲ್ಲವ ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: