ಬೆಂಗಳೂರು,ಮೇ 1- ಮೇ 3ರಂದು ರಾಜ್ಯ ಬಿಜೆಪಿ ಘಟಕದ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಲಿದ್ದು, ಈ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಸಂಜೆ 4 ಗಂಟೆಗೆ ಪ್ರಮುಖರ ಸಭೆ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಮೇ3 ರಂದು ಮಧ್ಯಾಹ್ನ 2 ಗಂಟೆಗೆ ಸಿಎಂ ನಿವಾಸದಲ್ಲಿ ನಡೆಯುವ ಭೋಜನ ಕೂಟದಲ್ಲಿ ಭಾಗಿಯಾಗಲಿರುವ ಅಮಿತ್ ಶಾ ಸಂಜೆ 4 ಗಂಟೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಒಂದೂವರೆ ಗಂಟೆ ಮಹತ್ವದ ಸಭೆ ನಡೆಸುವರು.
ಸಭೆಯಲ್ಲಿ ಸಂಘಟನಾತ್ಮಕ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದು ಅಗತ್ಯ ತಯಾರಿ ಮಾಡಿಕೊಳ್ಳಲು ಈ ಸಭೆ ನಡೆಸಲಾಗುತ್ತಿದೆ. ಮತ್ತೆ ಅಧಿಕಾರಕ್ಕೆ ಬರಲು ಏನೆಲ್ಲಾ ಮಾಡಬೇಕು ಎಂಬ ಆಕ್ಷನ್ ಪ್ಲಾನ್ ಸಿದ್ಧಪಡಿಸಿ ರಾಜ್ಯ ಘಟಕ ಮತ್ತು ಸರ್ಕಾರಕ್ಕೆ ಅಮಿತ್ ಶಾ ಹೊಸ ಟಾರ್ಗೆಟ್ ನೀಡಲಿದ್ದಾರೆ.
ಇದರ ಜೊತೆಗೆ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ, ನಿಗಮ ಮಂಡಳಿಗಳಿಗೆ ನೇಮಕ ಕುರಿತು ಕೂಡಾ ಮಹತ್ವದ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.
ಅಮಿತ್ ಶಾ ರಾಜ್ಯ ಭೇಟಿ ಕಾರಣಕ್ಕೆ ದೆಹಲಿ ಪ್ರವಾಸಕ್ಕೆ ತೆರಳಿದ್ದರೂ ಮುಖ್ಯಮಂತ್ರಿ ಬೊಮ್ಮಾಯಿ ಹೈಕಮಾಂಡ್ ನಾಯಕರ ಭೇಟಿಗೆ ಸಮಯಾವಕಾಶ ಕೇಳಿರಲಿಲ್ಲ. ಬೆಂಗಳೂರಿನಲ್ಲೇ ಚರ್ಚಿಸುವ ಅಮಿತ್ ಶಾ ಅಪೇಕ್ಷೆಯಂತೆ ಸಿಎಂ ದೆಹಲಿ ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada