ಚಿತ್ರದುರ್ಗ: ಹುಬ್ಬಳ್ಳಿಯಲ್ಲಿ ಗಲಭೆ ನಡೆಸಿದವರನ್ನು ಕಾಂಗ್ರೆಸ್ ರಕ್ಷಣೆ ಮಾಡುತ್ತಿದೆ. ಸುಟ್ಟ ಮನೆಯಲ್ಲಿ ಬೆಂಕಿ ಕಾಯಿಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಪಸಂಖ್ಯಾತರು ಠಾಣೆಗೆ ಮುತ್ತಿಗೆ ಹಾಕಿ ಗಲಾಟೆ ಮಾಡಿದ್ದಾರೆ. ಗಲಭೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆ ಹೊರತು ರಕ್ಷಣೆ ಅಲ್ಲ. ಗಲಭೆಕೋರರ ವಿರುದ್ಧ ಕಾನೂನು ಕ್ರಮ ಜರುಗಿಸದಂತೆ ಹೇಳುವುದು ಕಾಂಗ್ರೆಸ್ಗೆ ಶೋಭೆ ತರುವುದಿಲ್ಲ’ ಎಂದು ಕಿಡಿಕಾರಿದರು.
‘ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೂ ಹಲವು ಸಚಿವರ ತಲೆದಂಡವಾಗಿದೆ. ಕೆ.ಜೆ.ಜಾರ್ಜ್ ಪದತ್ಯಾಗ ಮಾಡಿದ್ದರು. ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಪ್ರಕರಣದ ಸತ್ಯಾಸತ್ಯತೆ ಶೀಘ್ರ ಹೊರಬರಲಿದೆ. ಈಶ್ವರಪ್ಪ ಅವರು ಮತ್ತೆ ಸಂಪುಟಕ್ಕೆ ಮರಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
‘ಸಂಪುಟದಲ್ಲಿ ಐದು ಸ್ಥಾನಗಳು ಬಾಕಿ ಇವೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗಲಿದೆ’ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada