ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!

 

ಬೆಂಗಳೂರು, ಏಪ್ರಿಲ್ 03; ‘ಇದಪ್ಪಾ ಬಹುಜನ ಹಿತಾಯ, ಬಹುಜನ ಸುಖಾಯ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!’ ಎಂದು ಮಾಜಿ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. 13 ದಿನಗಳಲ್ಲಿ 8 ರೂ. ಏರಿಕೆಯಾಗಿದ್ದು, ಎಚ್. ಡಿ. ಕುಮಾರಸ್ವಾಮಿ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ ಮತ್ತು ಬಿಜೆಪಿಯನ್ನು ಟೀಕಿಸಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಅವರು, ‘ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; 13 ದಿನಗಳಲ್ಲಿ 8 ರೂ. ಜಿಗಿತ!. ಇದಪ್ಪಾ ಬಹುಜನ ಹಿತಾಯ, ಬಹುಜನ ಸುಖಾಯ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!’ ಎಂದು ವ್ಯಂಗ್ಯವಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಎಚ್. ಡಿ. ಕುಮಾರಸ್ವಾಮಿ, ‘ಘನವೇತ್ತ ಮಾಜಿ ಸಿಎಮ್ಮು, ಮಾಜಿ ಕೇಂದ್ರಮಂತ್ರಿಗಳೂ ಡಿ. ವಿ. ಸದಾನಂದಗೌಡರು, ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರಕಾರ ಕಾರಣ ಎಂದಿದ್ದಾರೆ. 8 ವರ್ಷವಾದರೂ ಯುಪಿಎ ಮಾಡಿದ ತಪ್ಪು ಸರಿ ಮಾಡಲಿಲ್ಲ, ಏಕೆ? ಅಡುಗೆ ಮನೆಗಳಲ್ಲಿ ತಾಯಂದಿರು, ಬೆಲೆ ಏರಿಕೆ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮಗೆ ರಾಜಕೀಯ ಮುಖ್ಯವಾಗಿದೆ. ನಾಚಿಕೆಯಾಗಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ಬಲ್ಲಿದ ಜನರ ಪಕ್ಷ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ’ ಎಂದು ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೂಗಾಡಿ ಗಲಾಟೆ ಎಬ್ಬಿಸಿದರು
ಎಚ್. ಡಿ. ಕುಮಾರಸ್ವಾಮಿ ತಮ್ಮ ಟ್ವೀಟ್‌ನಲ್ಲಿ, ’13 ದಿನದಿಂದ ಬೆಲೆ ಏರಿಕೆ ನಿರಂತರ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., (ಇಂದಿನ ಹೆಚ್ಚಳ 88 ಪೈಸೆ) ಡೀಸೆಲ್ ಬೆಲೆ ಲೀಟರಿಗೆ 92.83 ರೂ. (ಇಂದಿನ ಹೆಚ್ಚಳ:78 ಪೈಸೆ) ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ. 2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, & ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿ ಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು’ ಎಂದು ಹೇಳಿದ್ದಾರೆ.

ಖಾಲಿ ಸಿಲಿಂಡರ್ ಹೊತ್ತರು

‘ಹಾದಿಬೀದಿಯಲ್ಲಿ ಖಾಲಿ ಸಿಲಿಂಡರುಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ?. ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ. ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ. ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ’ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೌನಿ ಮುಖ್ಯಮಂತ್ರಿಗಳು

‘ಹಿಜಾಬ್, ಕೇಸರಿ ಶಾಲು, ಟಿಪ್ಪು ಪಠ್ಯ, ಮುಸ್ಲಿಂ ವರ್ತಕರಿಗೆ ನಿಷೇಧ, ಹಲಾಲ್ ಕಟ್ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುವ ಶ್ರೀಮಂತರ ಪಕ್ಷ ಬಿಜೆಪಿಯು ಬೆಲೆ ಏರಿಕೆ ಬಗ್ಗೆ ಮಾತ್ರ ಮೌನವಾಗಿದೆ. ರಾಜ್ಯ ಸರಕಾರವೂ ಮೌನ!!
ಮುಖ್ಯಮಂತ್ರಿಗಳೂ ಮೌನ. ಮೌನಂ ಶರಣಂ ಗಚ್ಛಾಮಿ. ಮೌನಿ ಪಕ್ಷ. ಮೌನಿ ಸರಕಾರ. ಮೌನಿ ಮುಖ್ಯಮಂತ್ರಿ.
ಡಾ. ಮನಮೋಹನ್ ಸಿಂಗ್ ಅವರನ್ನು ʼಮೌನಿ ಪ್ರಧಾನಿʼ ಎಂದ ಇವರ ಅಬ್ಬರ ಎಲ್ಲಿ ಉಡುಗಿ ಹೋಗಿದೆ? ದನಿಯೆತ್ತಿ ಬೆಲೆ ಏರಿಕೆ ವಿರುದ್ಧ. ಇದು ನನ್ನ ಆಗ್ರಹ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

150 ಸೀಟು ರೋಡ್ ಮ್ಯಾಪ್

‘ಬೆಲೆ ಏರಿಕೆ ಬಗ್ಗೆ ಜನರ ಆಕ್ರೋಶ ಎಲ್ಲಿ ಆಸ್ಫೋಟಗೊಂಡು ಬಿಜೆಪಿ ಬುಡಕ್ಕೆಲ್ಲಿ ಬೆಂಕಿ ಬೀಳುತ್ತದೋ ಎಂಬ ಭಯದಿಂದ ಆ ಮುಗ್ಧಜನರ ಮನಸ್ಸನ್ನು ಸೂಕ್ಷ್ಮ ವಿಷಯಗಳ ಕಡೆ ಹೊರಳುವಂತೆ ಮಾಡಲಾಗಿದೆ. ʼ150 ಸೀಟಿನ ರೋಡ್ ಮ್ಯಾಪ್ ಎಲ್ಲಿ ಮಣ್ಣುಪಾಲಾಗುತ್ತದೋ ಎಂದು ಹಿಂದುತ್ವದ ವಿನಾಶಕ್ಕೆ ಹಿಂಸಾಚಾರದ ಶಂಖ ಊದಲಾಗಿದೆ’ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಜೆ.ಪಿ.ನಡ್ಡಾ ಆಗಮನ!

Sun Apr 3 , 2022
  ಬೆಂಗಳೂರು,ಏ.3- ಕೇಂದ್ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಅಂದರೆ ಕೇವಲ ಎರಡು ವಾರಗಳ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. 2023ರ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಮುಂಚಿತವಾಗಿಯೇ ಆಡಳಿತಾರೂಢ ಬಿಜೆಪಿಯಲ್ಲಿ ತಯಾರಿ ಆರಂಭವಾಗಿದೆ. ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ಬಿಜೆಪಿ ಅಧ್ಯಕ್ಷ ಜೆಸಿ ನಡ್ಡಾ ಅವರು ಏ.16 ಮತ್ತು 17ರಂದು ರಾಜ್ಯಕ್ಕೆ ಬರಲಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ […]

Advertisement

Wordpress Social Share Plugin powered by Ultimatelysocial