ಬೆಂಗಳೂರು,ಮೇ 18-ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕೆಲವು ಕಡೆ ವ್ಯಾಪಕ ಹಾನಿಯಾಗಿದ್ದು, ತಕ್ಷಣವೇ ತುರ್ತು ಪರಿಹಾರವನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಕೆಲವು ಕಡೆ 100ಮಿಲಿಮೀಟರ್ ಹಾಗೂ ಇನ್ನೂ ಕೆಲವು ಕಡೆ 99ಮಿಲಿಮೀಟರ್ ಮಳೆಯಾಗಿದೆ. ಎಲ್ಲೆಲ್ಲಿ ಹೆಚ್ಚಿನ ಹಾನಿಯಾಗಿದೆಯೋ ಅಂತಹ ಕಡೆ ಪರಿಹಾರ ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ನೀರು ಸರಿಯಾಗಿ ಚರಂಡಿಗೆ ಹೋಗದ ಕಾರಣ ಕೆಲವು ಪ್ರದೇಶಗಳಲ್ಲಿ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ. ಎಲ್ಲೆಲ್ಲಿ ಈ ರೀತಿ ಅನಾಹುತವಾಗಿದೆಯೋ ಅಲ್ಲಿ ತಕ್ಷಣ ಪರಿಹಾರ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಬಿಬಿಎಂಪಿ ಸಿದ್ಧವಾಗಿದೆ ಎಂದರು.
ವಿಶೇಷವಾಗಿ ತಗ್ಗು ಪ್ರದೇಶಗಳ ಕಡೆ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿದೆ. ಮಳೆ ಹೆಚ್ಚಿನ ಪ್ರಮಾಣದಲ್ಲಿ ಬಂದಾಗ ಇಂತಹ ಅವಘಡಗಳು ಸಂಭವಿಸುತ್ತವೆ. ಆದರೂ ಈಗಾಗಲೇ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಹೇಳಿದರು.
ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ತತ್ಕ್ಷಣವೇ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚನೆಕೊಟ್ಟಿದ್ದೇನೆ. ಕಾಲುವೆಯಲ್ಲಿ ಹೂಳೆತ್ತುವುದು. ವೈಟ್ಟ್ಯಾಪಿಂಗ್, ರಸ್ತೆ ಅಗಲೀಕರಣ ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳನ್ನು ಕಾಲಿಮಿತಿಯಲ್ಲಿ ತೆಗೆದುಕೊಳ್ಳುವಂತೆ ತಿಳಿಸಿದರು.
ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಪಾಲಿಕೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಎಲ್ಲೆಲ್ಲಿ ಮಳೆಯಿಂದ ಅನಾಹುತವಾಗಿದೆಯೋ ಅಂತಹ ಕಡೆ ಪರಿಹಾರ ಕಾರ್ಯ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada