ಚಂದ್ರಶೇಖರ ಪಾಟೀಲರು ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳಲ್ಲಿ ವ್ಯಾಪಿಸಿದ್ದವರು. ಇಂದು ಈ ಮಹನೀಯರ ಸಂಸ್ಮರಣೆ ದಿನ.
ಚಂದ್ರಶೇಖರ ಪಾಟೀಲರು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್ 18ರಂದು ಜನಿಸಿದರು. ತಂದೆ ಬಸವರಾಜ ಹಿರೇಗೌಡ. ತಾಯಿ ಮುರಿಗೆವ್ವ.
ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಅವರ ತಂದೆಯವರಿಗೆ ಇಂಗ್ಲಿಷ್ ಬಗ್ಗೆ ಅಭಿಮಾನವಿತ್ತು. ಅದರಿಂದ ಪ್ರೇರಿತರಾಗಿ ಇಂಗ್ಲಿಷ್ ಎಂ.ಎ. ಪದವಿ ಗಳಿಸಿದರು. ಇದಲ್ಲದೆ ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೊಮಾ ಪಡೆದರು. ಶಿಕ್ಷಣದ ಪ್ರತಿ ಹಂತದಲ್ಲಿಯೂ ಆಗ್ರ ಶ್ರೇಯಾಂಕ ಗಳಿಸಿದ ಕೀರ್ತಿ ಅವರದ್ದಾಗಿತ್ತು.
ಚಂದ್ರಶೇಖರ ಪಾಟೀಲರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧಕ ವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಲೇ ತಮ್ಮ ಕಾವ್ಯ ಹಾಗೂ ನಾಟಕಗಳ ಮೂಲಕ ಪ್ರಸಿದ್ಧರಾಗುತ್ತಾ ಬಂದರು. ಅವರು ಹಾವೇರಿಯ ಮುನಿಸಿಪಲ್ ಹೈಸ್ಕೂಲಿನಲ್ಲಿದ್ದಾಗಲೇ ಕವನ ಬರೆಯುವುದರ ಬಗ್ಗೆ ಆಸಕ್ತಿ ಮೂಡಿಸಿಕೊಂಡಿದ್ದರು. ಅರವಿಂದರ ಬಗ್ಗೆ ಭಾವೋದ್ವೇಗದಿಂದ ಮಾತನಾಡುತ್ತಿದ್ದ ಗಂಗಾಧರ ಸವದತ್ತಿ ಮಾಸ್ತರರು, ವ್ಯಂಗ್ಯ ಶೈಲಿಯಲ್ಲಿ ಬದುಕಿನ ಹಾಗೂ ಭಾಷೆಯ ಎಳೆಗಳನ್ನು ಬಿಚ್ಚಿಡುತ್ತಿದ್ದ ಆರ್.ವಿ.ಕುಲಕರ್ಣಿ (ಪ್ರಬಂಧಕಾರರಾದ ರಾ.ಕು.) ಮತ್ತು ಗಣಿತದ ಪ್ರಮೇಯಗಳನ್ನು ಬಿಡಿಸುವ ಮುನ್ನ ಹಿಂದಿನ ರಾತ್ರಿ ಬರೆದಿದ್ದ ಕವನಗಳನ್ನೂ ವಾಚಿಸಲು ಪ್ರಾರಂಭಿಸುತ್ತಿದ್ದ ಪಿ.ಜಿ. ಬಿದರಿಮಠ ಮಾಸ್ತರು – ಹೀಗೆ ಹಲವಾರು ಮಂದಿ ಇವರ ಎಳೆ ವಯಸ್ಸಿನಲ್ಲಿಯೇ ಸಾಹಿತ್ಯದ ಪ್ರಭಾವ ಬೀರಿದ್ದರು. ಧಾರವಾಡದ ಕಾಲೇಜಿಗೆ ಬಂದಾಗ ಪ್ರಿನ್ಸಿಪಾಲರಾಗಿದ್ದ ವಿ.ಕೃ. ಗೋಕಾಕರು ನವ್ಯಕಾವ್ಯ ನಿರ್ಮಿತಿಯ ನೇತಾರರಲ್ಲೊಬ್ಬರಾಗಿದ್ದು, ಇವರ ಪ್ರಭಾವಕ್ಕೆ ಒಳಗಾಗಿ ಕವನಗಳನ್ನೂ ಬರೆಯತೊಡಗಿ, ಅವುಗಳಲ್ಲಿ ಹಲವಾರು ಕವನಗಳು ‘ಪ್ರಪಂಚ’ ಪತ್ರಿಕೆಯಲ್ಲಿ ಪ್ರಕಟಗೊಂಡವು. ಕಾವ್ಯದಲ್ಲಿ ಬೆಳೆದ ಆಸಕ್ತಿಯಿಂದ, ಹಲವಾರು ಮಂದಿ ಉದಯೋನ್ಮುಖರು ಸೇರಿ ‘ಕಮಲ ಮಂಡಲ’ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದರು. 1957ರಲ್ಲಿ ಇವರು ಬರೆದ ಕವನಗಳಾದ ಹೊಂಗನಸ ಹಡಗು, ನಾಳಿಗಿದೋ ಸ್ವಾಗತ, ಚರಿಪನಾದವೊ ಹಾಡು ಹಕ್ಕಿಯೋ ಮುಂತಾದ ಕವನಗಳು ಪ್ರಕಟಗೊಂಡ ನಂತರ 1960ರಲ್ಲಿ ‘ಬಾನುಲಿ’ ಎಂಬ ಸಂಗ್ರಹವನ್ನು ಹೊರತಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: