ಪ್ರಶ್ನೋತ್ತರ ವೇಳೆ ಜೆಡಿಎಸ್’ನ ಕೆ.ಟಿ.ಶ್ರೀಕಂಠೇಗೌಡ, ದೇವೇಗೌಡ, ಬಿಜೆಪಿಯ ಅರುಣ್ ಶಹಾಪೂರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2022-23ರಲ್ಲಿ ಆಯೋಗ ರಚನೆ ಮಾಡುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರ 2017-18ರಲ್ಲಿ ವೇತನ ಪರಿಷ್ಕರಣೆ ಮಾಡಿದ್ದು, ಪ್ರಸ್ತುತ ಜಾರಿಯಲ್ಲಿದೆ. ಈ ಬಗ್ಗೆ ರಾಜ್ಯದ ಆರ್ಥಿಕ ಸ್ಥಿತಿಗತಿ ನೋಡಿಕೊಂಡು ಕ್ರಮ ಕೈಗೊಳ್ಳಲಾಗಬೇಕಾಗುತ್ತದೆ. ಬಜೆಟ್ ಪೂರ್ವ ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾವುದು ಎಂದು ತಿಳಿಸಿದರು. ಇದೇ ವೇಳೆ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ನೌಕರರ ಶ್ರಮವನ್ನು ಶ್ಲಾಘಿಸಿದರು.
ರಾಜ್ಯ ಸರ್ಕಾರಿ ನೌಕರರ ವೇತನವು ರಾಜ್ಯ ಆಯೋಗ ಮತ್ತು ಕೇಂದ್ರ ಸರ್ಕಾರಿ ನೌಕರರು ಕೇಂದ್ರ ಆಯೋಗವನ್ನು ಆಧರಿಸಿರುವುದರಿಂದ ಅವರ ನಡುವೆ ವ್ಯತ್ಯಾಸಗಳಿವೆ. ರಾಜ್ಯ ಸರ್ಕಾರಿ ನೌಕರರ ಹಿತಾಸಕ್ತಿಗಳನ್ನು ಸರ್ಕಾರ ಕಾಪಾಡಲಿದೆ ಎಂದು ಭರವಸೆ ನೀಡಿದರು.
ಪರಿಷತ್ತಿನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಎಂಎಲ್ಸಿಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ವ್ಯತ್ಯಾಸವಿದ್ದು, 25 ರಾಜ್ಯಗಳು ತಮ್ಮ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನವಾಗಿ ವೇತನ ನೀಡುತ್ತಿವೆ. ಕರ್ನಾಟಕವೂ ಮಾಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕತೆಗೆ ಹೊಡೆತ ಬಿದ್ದಿದೆ, ಆದರೆ ಇದರ ಹೊರತಾಗಿಯೂ, ಸರ್ಕಾರವು 15,000 ಶಿಕ್ಷಕರು, 16,000 ಪೊಲೀಸ್ ಕಾನ್ಸ್ಟೇಬಲ್ಗಳ ನೇಮಕಾತಿ ಮತ್ತು ಇತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇಮಕಾತಿಯನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಮಾಹಿತಿ ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: