ಚೆನ್ನೈ: ಕರ್ನಾಟಕದಲ್ಲಿ ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳ ನಡುವೆ ನಡೆಯುತ್ತಿರುವ ಕೋಮು ಸಂಘರ್ಷದ ವಿರುದ್ಧ ಅಸಮಾಧಾನ ಹೊರಹಾಕಿರುವ ನಟ ಹಾಗೂ ಮಕ್ಕಳ್ ನಿಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್, ಮುಗ್ಧ ವಿದ್ಯಾರ್ಥಿಗಳ ನಡುವೆ ಕೋಮು ವಿಭಜನೆ ಮಾಡಲಾಗಿದೆ.ಇದು ತಮಿಳುನಾಡಿನಲ್ಲಿ ಆಗದಂತೆ ತಡೆಯುವ ಸಮಯವಿದು ಎಂದಿದ್ದಾರೆ.ಕಮಲ್ ಹಾಸನ್ ತಮಿಳು ಭಾಷೆಯಲ್ಲಿ ಟ್ವೀಟ್ ಮಾಡಿದ್ದು, ಅದರ ಸಾರಾಂಶ ಹೀಗಿದೆ. ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆ ಅಶಾಂತಿಯನ್ನು ಹುಟ್ಟುಹಾಕುತ್ತಿದೆ. ಅಮಾಯಕ ವಿದ್ಯಾರ್ಥಿಗಳ ನಡುವೆ ಕೋಮು ವಿಭಜನೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.ಪಕ್ಕದ ರಾಜ್ಯ ಕರ್ನಾಟಕದಲ್ಲಿ ಈಗ ಏನು ನಡೆಯುತ್ತಿದೆ ಎಂದು ತಮಿಳುನಾಡಿನಲ್ಲಿ ನಡೆಯದಂತೆ ನೋಡಿಕೊಳ್ಳಲು ಎಚ್ಚರ ವಹಿಸಬೇಕಾದ ಸಮಯ ಇದಾಗಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ರಾಜ್ಯದ ಪ್ರಗತಿಪರ ಶಕ್ತಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಕಮಲ್ ಹಾಸನ್ ಹೇಳಿದ್ದಾರೆ.ಉಡುಪಿಯ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದ್ದ ಹೆಣ್ಣು ಮಕ್ಕಳನ್ನು ಶಾಲೆಗೆ ಸೇರಿಸಲಿಲ್ಲ ಎಂಬ ಆರೋಪದ ನಂತರ ಆ ಆರು ವಿದ್ಯಾರ್ಥಿನಿಯರು ಕೋರ್ಟ್ ಮೆಟ್ಟಿಲೇರಿದ ಬಳಿಕ ಆರಂಭವಾದ ಹಿಜಾಬ್ ವಿವಾದವು ಇದೀಗ ರಾಜ್ಯಾದ್ಯಂತ ವ್ಯಾಪಿಸಿದೆ. ಒಂದೆಡೆ ವಿದ್ಯಾರ್ಥಿನಿಯರು ಹಿಜಾಬ್ ಬೇಕೆಂದರೆ, ಇನ್ನೊಂದೆಡೆ ವಿದ್ಯಾರ್ಥಿಗಳು ಕೇಸರಿ ಶಾಲೂ ತೊಟ್ಟು ಬೀದಿಗೆ ಇಳಿದಿದ್ದಾರೆ. ಈ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಶಾಲಾ ಕಾಲೇಜುಗಳಿಗೆ ಮೂರು ದಿನ ಸರ್ಕಾರ ರಜೆ ಘೋಷಣೆ ಮಾಡಿದೆ.ಇನ್ನು ತಮಿಳುನಾಡಿನ ಪಕ್ಕದ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಇಂಥದ್ದೆ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಜಾಗರೂಕರಾಗಿರುವಂತೆ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada