ಮೈಸೂರು,ಫೆ.20-ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಎರಡು ಗ್ಯಾರಂಟಿ ಯೋಜನೆ ಘೋಷಿಸಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಜಾರಿ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ. ಕೊಡ್ತೇವೆ. ವರ್ಷಕ್ಕೆ ಒಟ್ಟು 42 ಸಾವಿರದಂತೆ 5 ವರ್ಷಕ್ಕೆ 2 ಲಕ್ಷ ಕೊಡ್ತೇವೆ ಎಂದು ತಿಳಿಸಿದ್ದಾರೆ.ಮೈಸೂರಿನ ವರುಣಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಪ್ರಜಾ ಧ್ವನಿ ಕಾರ್ಯಕ್ರಮದಲ್ಲಿ ಪಾಳ್ಗೊಂಡು ಮಾತನಾಡಿದ ಅವರುಈ ಯೋಜೆನೆ ಜತೆಗೆ 10 ಕೆಜಿ ಅಕ್ಕಿ. ನಾನು ಸಿದ್ದರಾಮಯ್ಯ ಸಹಿ ಹಾಕಿರೋ ಗ್ಯಾರಂಟಿ ಕಾರ್ಡ್ ನಿಮ್ಮ ಮನೆಗೆ ಬರುತ್ತಿದೆ, ಮೇ ತಿಂಗಳಲ್ಲಿ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ. ಜೂನ್ ತಿಂಗಳಿಂದ ಈ ಯೋಜನೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದು ಅವರು ಭರವಸೆ ನೀಡಿದ್ಧಾರೆ.ನಾವು ಘೋಷಣೆ ಮಾಡಿರುವ ಯೋಜನೆ ಜಾರಿ ಮಾಡದಿದ್ದರೆ, ನುಡಿದಂತೆ ನಡೆಯದಿದ್ದರೆ ನಾನು ಹಾಗೂ ಸಿದ್ದರಾಮಯ್ಯ ಅವರು ಮತ್ತೆ ಮತ ಕೇಳಲು ನಿಮ್ಮ ಮುಂದೆ ಬರುವುದಿಲ್ಲ ಎಂದು ಹೇಳಿದ್ದಾರೆ.ಕೋವಿಡ್ ಸಮಯದಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮ ಮಾಡಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ಹೋಗಿ ಧೈರ್ಯ ತುಂಬಿ, ಆಹಾರ ಪ್ಯಾಕ್ ನೀಡಿದರು. ರೈತರ ಬೆಳೆಗಳಿಗೆ ಮಾರುಕಟ್ಟೆ ಇಲ್ಲದಾಗ ಅವರಿಂದ ನೇರವಾಗಿ ಕೋಟ್ಯಂತರ ಮೊತ್ತದ ತರಕಾರಿ, ಹಣ್ಣು ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದೆವು. ಆ ಮೂಲಕ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ ಎಂದರು.ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 36 ಮಂದಿ ಸತ್ತರೂ ಆರೋಗ್ಯ ಸಚಿವ ಕೇವಲ 3 ಜನ ಸತ್ತಿದ್ದಾರೆ ಎಂದು ಸುಳ್ಳು ಹೇಳಿದ. ನಾವು ನಾಯಕರೆಲ್ಲ ಹೋಗಿ ಪರಿಶೀಲನೆ ಮಾಡಿದೆವು. ಜಿಲ್ಲಾ ಮಂತ್ರಿ ಸುರೇಶ್ ಕುಮಾರ್, ಆರೋಗ್ಯ ಮಂತ್ರಿ ಸುಧಾಕರ್ ಒಂದು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿಲ್ಲ. ಇವರು ಮನುಷ್ಯರಾ ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ಈ ಎಲ್ಲ ಕುಟುಂಬಗಳಿಗೆ ತಲಾ 1 ಲಕ್ಷ ನೆರವು ನೀಡಿದೆವು. ಕೋವಿಡ್ ಬಂದಾಗ ನಾವು ಮನೆಯಲ್ಲಿ ಕೂರದೇ ಜೀವ ಹಾಗೂ ಜೀವನ ಉಳಿಸುವ ಕೆಲಸ ಮಾಡಿದ್ದೇವೆ. ಕೋವಿಡ್ ಭ್ರಷ್ಟಾಚಾರ ಬಯಲಿಗೆಳೆದು ಕೆಲಸ ಮಾಡಿದ್ದೇವೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada