ಬೆಂಗಳೂರು, ಜೂ.2- ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದೈವಾರ್ಷಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿಯ ಗೊಂದಲ ಮುಂದುವರೆದಿದೆ.
ಈಗಾಗಲೇ ಎರಡು ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈತನಕ ನಾಮಪತ್ರ ವಾಪಸ್ಪಡೆಯುವ ಯಾವುದೇ ಸುಳಿವನ್ನು ನೀಡಿಲ್ಲ.
ಉಭಯ ಪಕ್ಷಗಳ ನಾಯಕರ ನಡುವೆ ಬಿಜೆಪಿಯ ಮೂರನೆ ಅಭ್ಯರ್ಥಿ ಗೆಲುವನ್ನು ತಡೆಯಲು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಮಾತುಕತೆ ನಡೆದಿದೆಯಾದರೂ ನಿರೀಕ್ಷಿತ ಫಲ ಈತನಕ ದೊರೆತಿಲ್ಲ. ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್ ಅವರನ್ನು ಕಣಕ್ಕಿಳಿಸಿದ್ದು, ಜೆಡಿಎಸ್ ನಮ್ಮ ಅಭ್ಯರ್ಥಿಯನ್ನೇ ಬೆಂಬಲಿಸಬೇಕು. ಆ ಮೂಲಕ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಚುನಾಯಿಸಿದಂತಾಗುತ್ತದೆ ಎಂಬ ವಾದವನ್ನು ಮುಂದಿಟ್ಟಿದೆ.
ಆದರೆ, ಜೆಡಿಎಸ್ ಜಾತ್ಯತೀತ ಮತಗಳು ವಿಭಜನೆಯಾಗಿ ಆಡಳಿತಾರೂಢ ಬಿಜೆಪಿಗೆ ಅನುಕೂಲವಾಗುವುದನ್ನು ತಪ್ಪಿಸಲು ಜೆಡಿಎಸ್ ಅಭ್ಯರ್ಥಿ ಕುಪೇಂದ್ರರೆಡ್ಡಿ ಅವರನ್ನು ಬೆಂಬಲಿಸಬೇಕು. ಅದಕ್ಕಾಗಿ ಕಾಂಗ್ರೆಸ್ನ ಎರಡನೇ ಅಭ್ಯರ್ಥಿ ವಾಪಸ್ ಪಡೆಯಬೇಕು ಎಂಬ ಬೇಡಿಕೆ ಮುಂದಿಟ್ಟಿದೆ.
ಈ ಎರಡು ಪಕ್ಷಗಳ ಅಭ್ಯರ್ಥಿಗಳು ಗೆಲ್ಲಲು ಬೇಕಾದ ಮತಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಪರಸ್ಪರ ಹೊಂದಾಣಿಕೆ ಅನಿವಾರ್ಯವಾಗಿದೆ.ಕಾಂಗ್ರೆಸ್ನ ಎರಡನೇ ಅಭ್ಯರ್ಥಿಗೆ ದೊರೆಯುವ ಮತಗಳಿಗಿಂತ ಜೆಡಿಎಸ್ ಅಭ್ಯರ್ಥಿಗೆ ಹೆಚ್ಚು ಮತ ದೊರೆಯುವುದರಿಂದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆಯಬೇಕು ಎಂಬ ಮನವಿಯನ್ನು ಮಾಡಲಾಗಿದೆ.
ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ನ ಎರಡನೇ ಅಭ್ಯರ್ಥಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ನಿನ್ನೆ ಜೆಡಿಎಸ್ ಮುಖಂಡರಾದ ಬಿ.ಎಂ.ಫಾರೂಕ್ ಹಾಗೂ ಟಿ.ಎ.ಶರವಣ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಸಹಕಾರ ನೀಡುವಂತೆ ಕೋರಿದ್ದಾರೆ.
ಆದರೆ, ನಿರ್ದಿಷ್ಟ ಯಾವುದೇ ಭರವಸೆಯನ್ನು ಸಿದ್ದರಾಮಯ್ಯ ಅವರಿಗೆ ನೀಡಿಲ್ಲ. ಆದರೂ ಕೊನೆಗಳಿಗೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಲಿದ್ದು, ನಮಗೆ ಅನುಕೂಲವಾಗಲಿದೆ ಎಂಬ ಆಶಾಭಾವನೆಯನ್ನು ಜೆಡಿಎಸ್ ಹೊಂದಿದೆ.
ಈ ನಡುವೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾಂಗ್ರೆಸ್ ವರಿಷ್ಠರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆ ಇದ್ದು, ಆಗೊಂದು ವೇಳೆ ಅದು ಫಲಪ್ರದವಾದರೆ ಪ್ರತಿಪಕ್ಷಗಳ ಮೈತ್ರಿ ಅಭ್ಯರ್ಥಿ ರಾಜ್ಯಸಭೆ ಪ್ರವೇಶಿಸುವ ಹಾದಿ ಸುಗಮವಾಗಲಿದೆ. ಇಲ್ಲದ್ದಿರೆ ಇಬ್ಬರೂ ಅಭ್ಯರ್ಥಿಗಳು ಪರಾಜಿತಗೊಂಡು ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವಿಗೆ ಸಹಕರಿಸಿದಂತಾಗಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada