ವಿದ್ಯಾರ್ಥಿಗಳ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರಕಾರದ ಮೇಲೆ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ವರು, ವೈದ್ಯಕೀಯ ಸೀಟುಗಳ ಹಂಚಿಕೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಗಳೇ ಮ್ಯಾನೇಜ್ ಮೆಂಟುಗಳಿಗೆ ಅನುಕೂಲ ಮಾಡಿಕೊಡುತ್ತಿವೆ ಎಂದಿ ದೂರಿದ್ದಾರೆ. ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ನೀಟಾಗಿ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಅನುಮಾನ ಕಾಡುತ್ತಿದೆ.
ಕೇಂದ್ರ ಸರಕಾರಕ್ಕೆ ನೀಟ್ ವ್ಯವಸ್ಥೆಯನ್ನು ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡವಲ್ಲಿ ಇಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮನವರಿಕೆಯಾಗಿದೆ ಎಂದು ಸಮಾನ ಶಿಕ್ಷಣ, ಸಮಾನ ಅವಕಾಶಗಳ ಸಂವಿಧಾನದ ಆಶಯವನ್ನು ಕೇಂದ್ರ ಸರಕಾರ ಗಾಳಿ ತೂರಿದೆ. ನಾಲ್ಕು ತಿಂಗಳಿನಿಂದ ವೈದ್ಯ ಸೀಟುಗಳು ಹಂಚಿಕೆಯಾಗಿಲ್ಲ. ಇದರ ಪರಿಣಾಮ ಎಂಜಿನಿಯರಿಂಗ್ ಕೌನ್ಸೆಲಿಂಗ್ ಕೂಡ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಇದು ಎಂದಿದ್ದಾರೆ.
ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರವೇ? ಇದೇ ಸತ್ಯ ಎನ್ನುವಂತೆ ಕೇಂದ್ರ ಸರಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ ವಿಳಂಬ ದ್ರೋಹದ ಹಿಂದೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.ಸರಕಾರಗಳು ಅಸಹಾಯತೆಯ ನಾಟಕ ಆಡುತ್ತಾ ವಿದ್ಯಾರ್ಥಿ-ಪೋಷಕರನ್ನು ಯಾಮಾರಿಸುತ್ತಿವೆ. ನೀಟ್ ವಿಳಂಬದಿಂದ ವೈದ್ಯ, ಎಂಜಿನಿಯರಿಂಗ್ ಸೀಟುಗಳ ಕಾಳಸಂತೆ ಬಿಕರಿಗೆ ಸರಕಾರಗಳೇ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ ಎಂದು ವಾಗ್ದಾಳಿ ನಡೆಸಿದ್ದಾರೆ.ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುಡುವ ಜತೆಗೆ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ವಿಶ್ವಗುರು ಮಾಡುವ ಉಮೇದಿನಲ್ಲಿರುವ ಕೇಂದ್ರ, ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada