ಕಾವೇರಿ ವಿವಾದ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಮತ್ತೆ 15 ದಿನ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರ ಆದೇಶ ನೀಡಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಹಲವು ಕನ್ನಡಪರ ಸಂಘಟನೆಗಳು, ಆಮ್ ಆದ್ಮಿ ಪಕ್ಷ, ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಹೋರಾಟದಲ್ಲಿ ನಿರತವಾಗಿದೆ.
ಇನ್ನು ಕಾವೇರಿ ವಿವಾದದ ಬಗ್ಗೆ ಈವರೆಗೂ ಯಾವೊಬ್ಬ ಜನಪ್ರಿಯ ನಟರೂ ಕೂಡ ಮಾತನಾಡದೇ ಇರುವುದರ ಬಗ್ಗೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಬೆಂಗಳೂರು ಜನತೆಗೆ ಕಾವೇರಿ ನೀರು ಕುಡಿಯುವ ನೀರಿನ ಮೂಲವಾಗಿದ್ದು ಅವರು ಕೂಡ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಹಲವು ಸಂಘಟನೆಗಳು ಕರೆ ನೀಡಿದ್ದವು.
ನ್ಯಾಯ ಸಿಗಲಿ ಎಂದ ದರ್ಶನ್
ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಹಿರಿಯ ನಟರ ಬಗ್ಗೆ ಕನ್ನಡಪರ ಹೋರಾಟಗಾರರು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು. ಕಾವೇರಿ ವಿಚಾರದ ಬಗ್ಗೆ ಇವರು ಮಾತನಾಡಬೇಕು ಎಂದು ಒತ್ತಾಯಿಸಿದ್ದರು. ಈಗ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾವೇರಿ ವಿವಾದದ ಕುರಿತಂತೆ ಟ್ವೀಟ್ ಮಾಡಿದ್ದಾರೆ.
“ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ.” ಎಂದು ಟ್ವೀಟ್ ಮಾಡಿದ್ದಾರೆ.
ನೀರು ಬಿಟ್ಟರೆ ರಾಜ್ಯಕ್ಕೆ ತೀವ್ರ ಸಂಕಷ್ಟ
ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಮತ್ತು ಸರ್ವಪಕ್ಷಗಳ ಸಂಸದರ ಜೊತೆ ಇಂದು ದೆಹಲಿಯಲ್ಲಿ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ಸುಪ್ರೀಂ ಕೋರ್ಟ್ನ ವಕೀಲರು ಭಾಗವಹಿಸಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆಪ್ಟೆಂಬರ್ 26ರವರೆಗೆ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸೂಚನೆ ನೀಡಿತ್ತು. ಇದಕ್ಕೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಮ್ಮಲ್ಲಿ ನೀರೆ ಇಲ್ಲ ಎಂದಾಗ ಬಿಡುವುದು ಹೇಗೆ ಎಂದು ಪ್ರಶ್ನೆ ಮಾಡಿದೆ.