ಪುಣೆ: ಪುಣೆ ಜಿಲ್ಲೆಯ ದೌಂಡ್ ಪಟ್ಟಣದ ನದಿಯಿಂದ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದೊಂದು ಆಕಸ್ಮಿಕ ಸಾವು ಎಂದು ಪೊಲೀಸರು ವರದಿ ಮಾಡಿದ್ದಾರೆ. ಎಲ್ಲಾ ಏಳು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಟುಂಬ ಸದಸ್ಯರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದರೂ, ಎಲ್ಲಾ ಆಯಾಮಗಳಲ್ಲಿ ಪರಿಶೀಲಿಸಲಾಗುತ್ತಿದೆ.
ವಿವರವಾದ ತನಿಖೆ ನಡೆಸುವವರೆಗೆ ಏನನ್ನೂ ಹೇಳಲಾಗುವುದಿಲ್ಲ ಎಂದು ಪುಣೆ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜನವರಿ 18 ರಂದು ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.
ನಂತರ ಸ್ಥಳೀಯ ಮುನ್ಸಿಪಲ್ ಕಾರ್ಪೋರೇಶನ್ ಜೊತೆಗೆ ಜಂಟಿ ಕಾರ್ಯಾಚರಣೆ ಆರಂಭಿಸಲಾಯಿತು. ಸೋಮವಾರ ನಾಲ್ಕು ಮೃತದೇಹಗಳು ಪತ್ತೆಯಾಗಿದೆ. ಮೃತರ ಪೈಕಿ ಒಬ್ಬರ ಜೇಬಿನಿಂದ ಮೊಬೈಲ್ ಫೋನ್ ಪತ್ತೆಯಾಗಿದೆ. ಇದರಿಂದ ಅವರು ಗುರುತು ಪತ್ತೆ ಮಾಡಲು ಸಾಧ್ಯವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮೂವರ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ಎಲ್ಲಾ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಎಲ್ಲರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
https://play.google.com/store/apps/details?id=com.speed.newskannada