ನವದೆಹಲಿ ಫೆಬ್ರವರಿ 11: ದೆಹಲಿಯಲ್ಲೂ ಹಿಜಾಬ್ ಕಿಚ್ಚು ಹೊತ್ತಿದ್ದು ಇಂದು ದೆಹಲಿಯ ಕರ್ನಾಟಕ ಭವನದ ಬಳಿ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಕರ್ನಾಟಕ ಭವನಕ್ಕೆ ಸದ್ಯ ಬಿಗಿ ಭದ್ರತೆ ನಿಯೋಜಿಸಲಾಗಿದೆ. ನಿನ್ನೆ ಹಿಜಾಬ್ ವಿಚಾರಕ್ಕೆ ವಿದ್ಯಾರ್ಥಿಗಳು ದೆಹಲಿ ಕರ್ನಾಟಕ ಭವನದ ಮುಂದೆ ಪ್ರತಿಭಟನೆಗೆ ಪ್ರಯತ್ನಿಸಿದರು.ಆದರೆ ಪ್ರತಿಭಟನೆ ಮಾಡಲು ಪ್ರಯತ್ನಿಸುತ್ತಿದ್ದಂತೆ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದರು. ಇವತ್ತೂ ಕೂಡ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಜೆಎನ್ಯು ವಿದ್ಯಾರ್ಥಿಗಳು ದೆಹಲಿಯ ಕರ್ನಾಟಕ ಭವನದ ಪ್ರತಿಭಟನೆ ಮಾಡಲಿದ್ದಾರೆ ಎನ್ನಲಾಗುತ್ತದೆ. ವಿವಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ. ಹೀಗಾಗಿ ನೂರಕ್ಕೂ ಸಿಆರ್ಪಿಎಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಬಿಜೆಪಿ ಸರ್ಕಾರ ಮುಖ್ಯವಾಗಿ ಮಹಿಳಾ ವಿದ್ಯಾರ್ಥಿಗಳ ಶಿಕ್ಷಣವನ್ನು ಹತ್ತಿಕ್ಕುವಂಥ ಕೆಲಸ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ. ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಲು ಸಿದ್ದರಾಗಿದ್ದಾರೆ. ಹೀಗಾಗಿ ದೆಹಲಿಯ ಎರಡು ಕರ್ನಾಟಕದ ಭವನಗಳಿಗೆ ಬಿಗಿಭದ್ರತೆಯನ್ನು ಒದಗಿಸಲಾಗಿದೆ.ಕರ್ನಾಟಕದ ವಿವಿಧೆಡೆ ನಡೆದಿರುವ ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಕರ್ನಾಟಕ ಸರ್ಕಾರದ ನೀತಿಯೇ ಕಾರಣ ಎಂದು ಆರೋಪಿಸಿ ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘಟನೆ (ಎಐಎಲ್ಎಜೆ) ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ಯುವ ವಕೀಲರು ಹಾಗೂ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದರು.ಇಲ್ಲಿನ ಸರ್ದಾರ್ ಪಟೇಲ್ ಮಾರ್ಗದಲ್ಲಿರುವ ಕರ್ನಾಟಕ ಭವನದ ಶರಾವತಿ ಕಟ್ಟಡದ ಎದುರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಬಂದ ಐವತ್ತಕ್ಕೂ ಅಧಿಕ ಪ್ರತಿಭಟನಾಕಾರರನ್ನು ಬಂಧಿಸಲಾಯಿತು. ಪ್ರತಿಭಟನೆ ನಡೆಸಲೂ ಅವಕಾಶ ನೀಡದೆ ಅಭಿವೃಕ್ತಿ ಸ್ವಾತಂತ್ರ್ಯ ಹತ್ತಿಕ್ಕಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.ಬಿಜೆಪಿ ನೇತೃತ್ವದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ವಾಹನಗಳಲ್ಲಿ ಕರೆದೊಯ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಕರ್ನಾಟಕ ಭವನದ ಕಟ್ಟಡಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕೇಂದ್ರಿಯ ಮೀಸಲು ಪೊಲೀಸರ್ ಪಡೆ ಹಾಗೂ ದೆಹಲಿ ಪೊಲೀಸ್ ನ ಮುನ್ನರಕ್ಕೂ ಅಧಿಕ ಸಿಬ್ಬಂದಿಯನ್ನು ಪ್ರತಿಭನಾ ಸ್ಥಳದಲ್ಲಿ ನಿಯೋಜಿಸಲಾಗಿದೆ. ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ನಿನ್ನೆ ಮೌಖಿಕ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್ ಇಂದು ಮಧ್ಯಂತರ ಆದೇಶವನ್ನು ಪ್ರಕಟಿಸಿದೆ. ಅದರಲ್ಲಿ ಹೈಕೋರ್ಟ್ ಹೀಗೆ ಹೇಳಿದೆ: ನಮ್ಮದು ನಾಗರಿಕ ಸಮಾಜ. ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ತಡೆಯಿರದ ಪ್ರತಿಭಟನೆಗಳಿಂದ ಶಾಲೆ ಕಾಲೇಜುಗಳು ಬಂದ್ ಆಗಬಾರದು.ಶಿಕ್ಷಣ ಸಂಸ್ಥೆಗಳು ಅನಿರ್ದಿಷ್ಟ ಕಾಲ ಬಂದ್ ಆಗುವುದು ಸಂತಸದ ಸಂಗತಿಯಲ್ಲ. ಈ ಪ್ರಕರಣದ ವಿಚಾರಣೆಯನ್ನು ತುರ್ತು ಆಧಾರದ ಮೇಲೆ ನಡೆಸಲಾಗುತ್ತಿದೆ. ಶೈಕ್ಷಣಿಕ ವರ್ಷವನ್ನು ವಿಳಂಬಿಸುವುದರಿಂದ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾಗುತ್ತದೆ. ಉನ್ನತ ಶಿಕ್ಷಣದ ಪ್ರವೇಶಕ್ಕೆ ಸಮಯ ಈಗಾಗಲೇ ನಿಗದಿಯಾಗಿರುತ್ತದೆ. ನಿಗದಿತ ಸಮಯದೊಳಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವುದು ಕಡ್ಡಾಯವಾಗುತ್ತದೆ ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಹೇಳಿದೆ.ಅಲ್ಲದೆ ಮುಂದುವರಿದು, ಆದಷ್ಟು ಬೇಗ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿ. ಎಲ್ಲಾ ವಿದ್ಯಾರ್ಥಿಗಳಿಗೂ ನಾವು ನಿರ್ಬಂಧ ಹೇರುತ್ತಿದ್ದೇವೆ. ತಮ್ಮ ಧರ್ಮಾನುಸಾರ ಕೇಸರಿ ಶಾಲನ್ನಾಗಲೀ, ಸ್ಕಾರ್ಫ್ ಅನ್ನಾಗಲೀ. ಹಿಜಾಬ್, ಧಾರ್ಮಿಕ ಬಾವುಟಗಳನ್ನಾಗಲೀ ತರಗತಿಯೊಳಗೆ ತರುವಂತಿಲ್ಲ. ಮುಂದಿನ ಆದೇಶದವರೆಗೂ ಇವುಗಳನ್ನು ತರದಂತೆ ನಿರ್ಬಂಧಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದೆ.ಹೈಕೋರ್ಟ್ನ ಮಧ್ಯಂತರ ಆದೇಶ ಅಂತಿಮವಲ್ಲ. ಸೋಮವಾರದ ನಂತರ ಹಂತಹಂತವಾಗಿ ವಿಚಾರಣೆ ನಡೆಸಲಿದ್ದು ಅಲ್ಲಿಯವರೆಗೆ ಯಾವುದೇ ಧಾರ್ಮಿಕ ಗುರುತು ಹೊಂದಿರುವ ಬಟ್ಟೆಗಳನ್ನು ಧರಿಸದೆ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳು ಬರಬೇಕು ಎಂದು ಹೇಳಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada