ಬೆಂಗಳೂರು:ಕೋಮು, ಮತೀಯವಾದದ ಮೂಲಕ ಅಶಾಂತಿ ಸೃಷ್ಟಿಸಿ, ಸಾಮಾಜಿಕ ಸ್ವಾಸ್ಥ್ಯ ಕೆಡಿಸಲು ನಡೆಸಿದ ಹುನ್ನಾರದ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಕರಾವಳಿಯ 6 ಶಾಸಕರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಮನವಿ ಮಾಡಿರುವ ರಘುಪತಿ ಭಟ್, “ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹಿಜಾಬ್ ಪ್ರಕರಣವನ್ನು ಮತೀಯ ಇಸ್ಲಾಂಮಿಕ್ ಸಂಘಟನೆಗಳು ಜನರಲ್ಲಿ ಕೋಮುವಾದ ಸೃಷ್ಟಿಸಿ ಅಶಾಂತಿ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಲ್ಲಿ ಪಡ್ಯಂತ್ರ ರೂಪಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸುವುದು ಅತ್ಯವಶ್ಯಕವಾಗಿದೆ’ಉಡುಪಿ ಜಿಲ್ಲೆಯಿಂದ ಅನ್ಯ ಜಿಲ್ಲೆ, ರಾಜ್ಯಕ್ಕೂ ವಿಸ್ತರಣೆಯಾದ ಹಿಜಾಬ್ ವಿವಾದ ನಿಟ್ಟಿನಲ್ಲಿ 12 ವಿದ್ಯಾರ್ಥಿನಿಯರಿಗೆ ಮತೀಯವಾದಿ ಇಸ್ಲಾಮಿಕ್ ಸಂಘಟನೆಗಳು ಮೂರು ದಿನಗಳ ಕಾಲ ಅಜ್ಞಾತ ಸ್ಥಳದಲ್ಲಿ ಮತಾಂಧತೆಯ ತರಬೇತಿ ನೀಡಿವೆ. ಆರು ವಿದ್ಯಾರ್ಥಿನಿಯರು ರಾಜ್ಯ ಸರ್ಕಾರದ ಆದೇಶ, ಹೈಕೋರ್ಟ್ ಮಧ್ಯಂತರ ತೀರ್ಪಿನ ಹೊರತಾಗಿಯೂ ಹಿಜಾಬ್ ಧರಿಸಿ ತರಗತಿಗೆ ತೆರಳುವ ಹಠಕ್ಕೆ ಬಿದ್ದಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.ಭಾರತದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ ಎನ್ನುವ ಅಂಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಂಬಿಸುವುದೇ ಮತಾಂಧ ಸಂಘಟನೆಗಳ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್ ಈ ಪತ್ರಕ್ಕೆ ಸಹಿ ಮಾಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada