ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕುಖ್ಯಾತ ರೌಡಿ ಶೀಟರ್ ಕಾವೂರಿನ ವಿಖ್ಯಾತ್ ಯಾನೆ ವಿಕ್ಕಿ ಬಪ್ಪಾಲ್ ಮತ್ತಾತನ ಪತ್ನಿ ಅಂಜನಾಳನ್ನು ಸಿಸಿಬಿ ಪೊಲೀಸರು ಮಂಗಳೂರಲ್ಲಿ ಬಂಧಿಸಿದ್ದಾರೆ.
ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಎಸ್ಸೈ ರಾಜೇಂದ್ರ ಬಿ. ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ಕಾವೂರು ಶಂಕರ ನಗರದ ಕೆಸಿ ಆಳ್ವ ಲೇಔಟ್ನ ಮನೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳಿಂದ 2 ಕೆಜಿ 200 ಗ್ರಾಂ ತೂಕದ 22 ಸಾವಿರ ರೂ. ಮೌಲ್ಯದ ಗಾಂಜಾ, 1500 ರೂ. ನಗದು, 1 ಮೊಬೈಲ್ ಫೋನ್, 1 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 92 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು ಅವರ ಪತ್ತೆ ಕಾರ್ಯ ಮುಂದುವರಿಸಲಾಗಿದೆ. ಮಾದಕ ವಸ್ತುಗಳ ಸೇವನೆ ಬಗ್ಗೆ ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಅವರು ಗಾಂಜಾವನ್ನು ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿದೆ. ಆರೋಪಿ ವಿಖ್ಯಾತ್ ಯಾನೆ ವಿಕ್ಕಿ ಬಪ್ಪಾಲ್ ಎಂಬಾತನ ವಿರುದ್ಧ ಈ ಹಿಂದೆ ನಗರದ ದಕ್ಷಿಣ, ಉತ್ತರ, ಬರ್ಕೆ, ಉರ್ವಾ, ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಹಾಗೂ ಕಿಡ್ನಾಪ್ಗೆ ಸಂಬಂಧಪಟ್ಟಂತೆ ೧೩ ಪ್ರಕರಣಗಳು ದಾಖಲಾಗಿರುತ್ತದೆ. ಅಂಜನಾಳ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಹಾಗೂ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಹಾಗೂ ಆತನ ಪತ್ನಿ ಜೊತೆ ಸೇರಿಕೊಂಡು ನಗರದ ಎಂ ಜಿ ರಸ್ತೆಯಲ್ಲಿರುವ ವಿದ್ಯಾಸಂಸ್ಥೆಗಳ ಪರಿಸರದಲ್ಲಿ, ಕೆಪಿಟಿ, ಕದ್ರಿ, ಜೆಪ್ಪು ಬಪ್ಪಾಲ್ ಪರಿಸರದಲ್ಲಿ ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: