ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಹುಟ್ಟಿದ ಜಿ. ಎಸ್. ಶಿವರುದ್ರಪ್ಪ (ಜೀಯೆಸ್ಸೆಸ್) ಈ ನಾಡಿನಲ್ಲಿ ವ್ಯಾಪಕವಾಗಿ ಸಂಚರಿಸಿದ್ದವರು. ಪ್ರವಾಸ ಪ್ರೀತಿಯ ಜೀಯೆಸ್ಸೆಸ್ ಈ ಸುತ್ತುವಿಕೆಯಿಂದ ಬಹುಶ್ರುತತೆಯನ್ನು, ಸಮಚಿತ್ತವನ್ನು, ಜನಸಂಪರ್ಕವನ್ನು ಪಡೆದಿದ್ದರು.ಸೃಜನ, ವಿಮರ್ಶೆ, ಮೀಮಾಂಸೆ, ಅಧ್ಯಯನ, ಅಧ್ಯಾಪನ, ಆಡಳಿತ, ಸಂಘಟನೆ – ಈ ಮುಂತಾದ ಸಾಂಸ್ಕೃತಿಕ ನೆಲೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕನ್ನಡ ಸಂಸ್ಕೃತಿಯ ಚಲನಶೀಲತೆಗೆ ತಮ್ಮ ಕೊಡುಗೆ ನೀಡುತ್ತ ಬಂದ ಮುಖ್ಯರಲ್ಲಿ ಜೀಯೆಸ್ಸೆಸ್ ಒಬ್ಬರಾಗಿದ್ದಾರೆ. ಡಾ. ಜಿ. ಎಸ್. ಶಿವರುದ್ರಪ್ಪನವರು ಗೋವಿಂದ ಪೈ, ಕುವೆಂಪು ನಂತರ ಮೂರನೆಯ ರಾಷ್ಟ್ರಕವಿಯಾಗಿ ನಮ್ಮ ಕನ್ನಡಿಗರ ಹೆಮ್ಮೆಯಾಗಿದ್ದಾರೆ.ಮೈಸೂರು ವಿಶ್ವವಿದ್ಯಾಲಯ ಸ್ಥಾಪನೆಯಾಗಿ, ದೂರ ದೂರದ ಹಳ್ಳಿಗಾಡುಗಳಲ್ಲಿ ಓದಿನ ಸೌಲಭ್ಯಗಳಿಗಾಗಿ ನಿಧಾನವಾಗಿ ತೆರೆದುಕೊಳ್ಳುತ್ತಿದ್ದ ಜನಸಮುದಾಯದಿಂದ ಬಂದು ಶ್ರಮ, ನಿಷ್ಠೆ, ಹಾಗೂ ಪ್ರತಿಭೆಗಳಿಂದ ರಂಗದಲ್ಲಿ ಮುಖ್ಯರಾಗತೊಡಗಿದ್ದ, ಹಾಗೆ ತೊಡಗಿ ಯಶಸ್ಸು ಪಡೆದ ಮೊದಲ ತಲೆಮಾರಿಗೆ ಜೀಯೆಸ್ಸೆಸ್ ಸೇರುತ್ತಾರೆ. ಕನ್ನಡ ನವೋದಯದ ಮುಂದಾಳುಗಳು ರೂಪಿಸಿದ ಹಾದಿಯಲ್ಲಿ ನಡೆದು ಸಮರ್ಥ ಉತ್ತರಾಧಿಕಾರಿಗಳೆಂದು ಎಂದು ಸಾಬೀತು ಮಾಡಿದರು.ಶಿಕ್ಷಕ ತಂದೆಯೊಡನೆ ಸುತ್ತುತ್ತ ಊರೂರುಗಳಲ್ಲಿ ಶಿಕ್ಷಣ ಪಡೆದು ಮೈಸೂರು ಸೇರಿ ವೆಂಕಣ್ಣಯ್ಯ, ಕುವೆಂಪು ಅವರ ಒತ್ತಾಸೆಯಲ್ಲಿ ಬಿ.ಎ (ಆನರ್ಸ್), ಎಂ.ಎ ಹಾಗೂ ಪಿಎಚ್.ಡಿ ಗಳನ್ನು ಪಡೆದರು. ಮಹಾರಾಜ ಕಾಲೇಜು ಆಗ ಟಂಕಸಾಲೆ. ಅಲ್ಲಿ ಪ್ರಮಾಣೀಕರಣಗೊಂಡರೆ ಮಾತ್ರ ಸಾಹಿತ್ಯಕ ವ್ಯಕ್ತಿತ್ವಕ್ಕೆ ಚಲಾವಣೆ ಸಿಗುವಂತೆ ಇದ್ದ ಕಾಲ. ವಿಶ್ವವಿದ್ಯಾಲಯದ ಹೊರಗಿದ್ದವರೂ ಒಂದಲ್ಲ ಒಂದು ಬಗೆಯಲ್ಲಿ ಈ ಟಂಕಸಾಲೆಯ ವ್ಯಾಪ್ತಿಯ ಒಳಗಾಗಿಯೇ ಇದ್ದರೆಂಬುದಕ್ಕೆ ಪ್ರಬುದ್ಧ ಕರ್ನಾಟಕ ಹಾಗೂ ಮಹಾರಾಜ ಕಾಲೇಜು ಕರ್ನಾಟಕ ಸಂಘ ಪ್ರಕಟಿಸಿದ ಗ್ರಂಥಗಳ ಪುಟಗಳು ಸಾಕ್ಷಿಯಾಗಿವೆ. ಜೀಯೇಸ್ಸೆಸ್ ಅಲ್ಲಿ ಕವಿಯಾಗುವ ಹಂಬಲಕ್ಕೆ ಪುಷ್ಟಿ ಪಡೆದರು. ಮಾಸ್ತಿಯವರು ‘ಜೀವನ’ದಲ್ಲಿ ಈ ಕವಿಯನ್ನು ಮೊದಲು ಅನಾವರಣಗೊಳಿಸಿದರಾದರೂ ಜೀಯೆಸ್ಸೆಸ್ ಹಸಿರು ಬಾವುಟ ಕಂಡದ್ದು ಕುವೆಂಪು ಅವರಲ್ಲಿ. ಈ ಮಹಾರಾಜ ಕಾಲೇಜು ಇವರೊಳಗಿನ ವಿಮರ್ಶಕ ಮೀಮಾಂಸಕರನ್ನೂ ಬೆಳೆಸಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
https://play.google.com/store/apps/details?id=com.speed.newskannada