ಬೆಂಗಳೂರು: ಯೂಕ್ರೇನ್ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯವೇನು? ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರ್ಕಾರ ಯೂಕ್ರೇನ್ನಿಂದ ವಿದ್ಯಾರ್ಥಿಗಳನ್ನು ಏರ್ಲಿಫ್ಟ್ ಮಾಡಿದೆ ಎಂಬುದೇನೋ ಸರಿ.
ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಗತಿಯೇನು? ಎಂದು ಸರಣಿ ಟ್ವೀಟ್ ಮೂಲಕ ಕೇಳಿದ್ದಾರೆ.
ಪೋಷಕರು ಸಾಲ ಮಾಡಿ ಮಕ್ಕಳನ್ನು ಯೂಕ್ರೇನ್ಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ. ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜು ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ. 2,65,720 ಕೋಟಿ ರೂ.ಬಜೆಟ್ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರ್ಕಾರವೇ ನೀಡಲಿ. ನೀಟ್ ಮೂಲಕ ಶೇ.50 ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರ್ಕಾರಗಳು ಅಂತಃಕರಣದಿಂದ ಆಲೋಚಿಸಲಿ ಎಂದು ಎಚ್ಡಿಕೆ ಸಲಹೆ ಕೊಟ್ಟಿದ್ದಾರೆ.
‘ವೈದ್ಯೋ ನಾರಾಯಣೋ ಹರಿಃʼಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು? ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು? ಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ. ಕೇಂದ್ರ-ರಾಜ್ಯ ಸರ್ಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada