ಬಿ.ಎಸ್. ಯಡಿಯೂರಪ್ಪ ಅವರನ್ನು ನಾನು ತಡರಾತ್ರಿ ಭೇಟಿ ಮಾಡಿರುವುದನ್ನು ಹೆಚ್ .ಡಿ. ಕುಮಾರಸ್ವಾಮಿ ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರು ತಡರಾತ್ರಿ ಭೇಟಿ ಮಾಡಿದ್ದೇ ಆದಾಯ ತೆರಿಗೆ ದಾಳಿಗೆ ಮೂಲಕ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಯಾವಾಗಲೂ ಸುಳ್ಳು ಆರೋಪಗಳನ್ನು ಮಾಡುವುದರಲ್ಲಿಯೇ ನಿಸ್ಸೀಮರು. ಅವರ ಬಗ್ಗೆ ಮಾತನಾಡಬಾರದು ಎಂದುಕೊಂಡಿದ್ದೆ. ಆದರೆ, ಅವರೇ ಕಾಲುಕೆರೆದು ಜಗಳಕ್ಕೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಬುಧವಾರ ಕಲಬುರ್ಗಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಯಡಿಯೂರಪ್ಪ ಅವರ ಹುಟ್ಟುಹಬ್ಬದ ದಿನ ಮಾತ್ರ ಅವರನನ್ನು ನೇರವಾಗಿ ಭೇಟಿ ಮಾಡಿದ್ದೆ. ಅದನ್ನು ಹೊರತುಪಡಿಸಿದರೆ ಅವರೊಂದಿಗೆ ಯಾವುದೇ ಸಂಪರ್ಕ ಇಟ್ಟುಕೊಂಡಿಲ್ಲ. ತಡರಾತ್ರಿ ನಾನು ಅವರನ್ನು ಭೇಟಿ ಮಾಡಿದ್ದೆ ಎಂಬುದು ಸತ್ಯಕ್ಕೆ ದೂರವಾದುದು. ಒಂದು ವೇಳೆ ನಾನು ಅವರನ್ನು ತಡರಾತ್ರಿ ಭೇಟಿ ಮಾಡಿರುವುದನ್ನು ಕುಮಾರಸ್ವಾಮಿ ಸಾಬೀತು ಮಾಡಲಿ. ಆಗ ನಾನು ರಾಜಕೀಯದಿಂದಲೇ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದರು.
ವಿರೋಧ ಪಕ್ಷದಲ್ಲಿ ಇರುವವರು ಆಡಳಿತ ಪಕ್ಷದವರೊಂದಿಗೆ ಸಂಪರ್ಕದಲ್ಲಿ ಇರಬೇಕು. ರಾಜ್ಯಕ್ಕೆ ಸಂಬಂಧಿಸಿದ ಯಾವುದೇ ವಿಷಯಗಳ ಸರ್ಕಾರದ ಜೊತೆ ಚರ್ಚಿಸಬೇಕಾಗುತ್ತದೆ. ಈ ಕಾರಣಕ್ಕಾಗಿ ನಾನು ಕುರಿತು ಆಡಳಿತದಲ್ಲಿ ಇರುವವರೊಂದಿಗೆ ದೂರವಾಣಿ ಮೂಲಕ ಮಾತ್ರ ಮಾತನಾಡಿದ್ದೇನೆ. ಅದನ್ನು ಹೊರತುಪಡಿಸಿ ತಡರಾತ್ರಿ ಭೇಟಿ ಮಾಡುವಂತಹ ರಾಜಕೀಯವನ್ನು ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ… ನಾನು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ದೂರವಾಣಿ ಕರೆ ಮಾಡಿ ಕೂಡಲೇ ತುರ್ತು ಪರಿಹಾರ ಕಾರ್ಯ ಸೂಚಿಸಿದ್ದೆ. ಸರ್ಕಾರದವರು ಈಗ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.