ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆಯ ಸಿಂಚನವಾಗಿದ್ದು, ನಗರದಲ್ಲಿ ಇಂದು ಮುಂಜಾನೆಯಿಂದ ತುಂತುರು ಮಳೆಯಾಗಿದೆ. ತಮಿಳುನಾಡನ್ನು ಇಂದು ಪ್ರವೇಶಿಸಲಿರುವ ಬುರೇವಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನಲ್ಲಿ ಮಳೆಯ ಆಗಮನವಾಗಿದೆ.ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಇದೇ ರೀತಿ ಮಳೆ ಸುರಿಯುವ ಸಾಧ್ಯತೆಯಿದೆ.
ಇಂದು ಮಧ್ಯಾಹ್ನ ತಮಿಳುನಾಡಿಗೆ ಬುರೇವಿ ಚಂಡಮಾರುತ ಪ್ರವೇಶ ಮಾಡುವುದರಿಂದ ಬೆಂಗಳೂರಿನಲ್ಲಿ ಸಂಜೆಯ ಬಳಿಕ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಲಿದ್ದು, ಉಳಿದೆಡೆ ಮೋಡ ಕವಿದ ವಾತಾವರಣ ಇರಲಿದೆ. ಇಂದು ಸಂಜೆ 5 ಗಂಟೆಯ ಬಳಿಕ ಮಳೆಯಾಗಲಿದ್ದು, ರಾತ್ರಿಯಿಡೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಕೂಡ ಬೆಳಗ್ಗೆಯಿಂದಲೇ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಬುರೇವಿ ಚಂಡಮಾರುತದ ಪರಿಣಾಮದಿಂದ ತಮಿಳುನಾಡಿನ ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಸಿವಗಂಗೈ ಮತ್ತು ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಭಾಗದಲ್ಲಿ ಡಿಸೆಂಬರ್ 6ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ತಮಿಳುನಾಡಿನ ಗಡಿಯಲ್ಲಿರುವ ಕರ್ನಾಟಕದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಇಂದಿನಿಂದ ಡಿ. 6ವರೆಗೆ ಮಳೆಯಾಗಲಿದೆ.
ಇದನ್ನು ಓದಿ : ನೂರಕ್ಕೆ ನೂರರಷ್ಟು ಕರ್ನಾಟಕ ಬಂದ್ ಖಚಿತ