ಬೆಂಗಳೂರು: ಪತ್ನಿ ಹಾಗೂ 3 ತಿಂಗಳ ಹೆಣ್ಣು ಮಗುವನ್ನು ಶಿವಗಂಗೆ ಬೆಟ್ಟದ ಮೇಲಿಂದ ತಳ್ಳಿ ಕೊಲೆಗೈದ ಪ್ರಕರಣದಲ್ಲಿ ಆರೋಪಿ ಪತಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಗಿರೀಶ್ ಹಾಗೂ ಭಾಗ್ಯಮ್ಮ ಪರಸ್ಪರ ಪ್ರೀತಿಸುತ್ತಿದ್ದರು.
ಮದುವೆಯಾಗುವುದಾಗಿ ತಿಳಿಸಿ ಭಾಗ್ಯಮ್ಮ ಜತೆ ಗಿರೀಶ್ ಲೈಂಗಿಕ ಸಂಪರ್ಕ ಬೆಳೆಸಿದ್ದ. ಇದರಿಂದ ಆಕೆ ಗರ್ಭವತಿಯಾಗಿದ್ದಳು. ಆಕೆಗೆ 9 ತಿಂಗಳು ತುಂಬಿದ್ದಾಗ ಕುಟುಂಬದ ಹಿರಿಯರು ಮಧ್ಯಪ್ರವೇಶಿಸಿ ಇಬ್ಬರಿಗೂ ಮದುವೆ ಮಾಡಿಸಿದ್ದರು. ಮದುವೆಯಾದ ಮೂರೇ ದಿನಕ್ಕೆ ಹೆಣ್ಣು ಮಗು ಜನಿಸಿತ್ತು. ಈ ಮಧ್ಯೆ 2010ರ ಡಿ.3ರಂದು ಗಿರೀಶ್ ತನ್ನ ಪತ್ನಿ ಹಾಗೂ ಮಗುವನ್ನು ಶಿವಗಂಗೆ ಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಬೆಟ್ಟದ ಮೇಲಿಂದ ಭಾಗ್ಯಮ್ಮ ಮತ್ತು ಮಗು ಕೆಳಗೆ ಬಿದ್ದು ಮೃತಪಟ್ಟಿದ್ದರು.
ಮೃತಳ ತಂದೆ ದಾಬಸ್ಪೇಟೆ ಠಾಣೆಯಲ್ಲಿ ದೂರು ನೀಡಿ, ಮಗಳು ಮತ್ತು ಮೊಮ್ಮಗಳನ್ನು ಅಳಿಯ ಗಿರೀಶ್(28) ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದರು. ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಭಾಗ್ಯಮ್ಮಳ ಶವ ಪತ್ತೆ ಹಚ್ಚಿದ್ದರು. ಆದರೆ, ಮಗುವಿನ ಮೃತದೇಹ ಪತ್ತೆಯಾಗಿರಲಿಲ್ಲ. ತನಿಖೆ ಪೂರ್ಣಗೊಳಿಸಿದ ಪೊಲೀಸರು ಗಿರೀಶ್ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಸಾಕ್ಷ್ಯಾಧಾರ ಕೊರತೆಯ ಕಾರಣ ನೀಡಿ ಆರೋಪಿಯನ್ನು ಖುಲಾಸೆಗೊಳಿಸಿ 2015ರ ಆ.5ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸರ್ಕಾರ (ದಾಬಸ್ಪೇಟೆ ಠಾಣೆ ಪೊಲೀಸರು) ಮೇಲ್ಮನವಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆ ನಡೆಸಿದ ಹೈಕೊರ್ಟ್ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ಪೀಠ, ಅರ್ಜಿದಾರ ತನ್ನ ಪತ್ನಿ ಹಾಗೂ ಮಗುವನ್ನು ಬೆಟ್ಟದ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆಂಬ ಆರೋಪವನ್ನು ಸಾಕ್ಷ್ಯಾಧಾರಗಳ ಸಮೇತ ಸಾಬೀತುಪಡಿಸಲು ಪೊಲೀಸರು ವಿಫಲರಾಗಿದ್ದಾರೆ. ಪೊಲೀಸರು ಒದಗಿಸಿರುವ ಸಾಕ್ಷ್ಯಗಳು ಒಂದೊಕ್ಕೊಂದು ವ್ಯತಿರಿಕ್ತವಾಗಿವೆ. ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಗಳೇ ಇಲ್ಲ. ಸಾಂದರ್ಭಿಕ ಸಾಕ್ಷ್ಯಗಳು ಸಹ ನಂಬಲಾರ್ಹವಾಗಿಲ್ಲ. ಆದ್ದರಿಂದ, ಆರೋಪಿಯನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಕ್ರಮ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಮೇಲ್ಮನವಿಯನ್ನ ವಜಾಗೊಳಿಸಿ, ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada