ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಇಂದಿನಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಗುರುತು ಧರಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಮಾತ್ರವಲ್ಲ ಶಿಕ್ಷಕಿಯರು ಕೂಡ ಹಿಜಾಬ್ ಧರಿಸಿ ಶಾಲೆಗೆ ಬಂದ ಘಟನೆ ನಡೆದಿದೆ.ಕಲಬುರ್ಗಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ಧರಿಸಿ ಶಾಲೆಗೆ ಆಗಮಿಸಿದ್ದಲ್ಲದೇ, ತರಗತಿಗಳನ್ನು ತೆಗೆದುಕೊಂಡಿದ್ದಾರೆ. ಕ್ಲಾಸ್ ರೂಮ್ ನಲ್ಲಿ ಹಲವು ವಿದ್ಯಾರ್ಥಿನಿಯರು ಕೂಡ ಹಿಜಾಬ್ ಧರಿಸಿಯೇ ಪಾಠ ಕೇಳುತ್ತಿರುವ ದೃಶ್ಯ ಕಂಡುಬಂದಿದೆ.ಯಾದಗಿರಿ, ಕೊಪ್ಪಳ, ಬೆಳಗಾವಿ ಜಿಲ್ಲೆಯ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಆಗಮಿಸಿದ್ದಾರೆ. ಇನ್ನು ಬೆಳಗಾವಿ ಸರ್ದಾರ್ ಹೈಸ್ಕೂಲ್ ನಲ್ಲಿ ವಿದ್ಯಾರ್ಥಿನಿಯರು ಮಾಸ್ಕ್ ಬೇಕಿದ್ದರೆ ತೆಗೆಯುತ್ತೇವೆ ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ತರಗತಿಗಳಿಗೆ ಹಾಜರಾಗಿದ್ದಾರೆ.ಮಂಡ್ಯ ಜಿಲ್ಲೆಯ ರೋಟರಿ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ಧರಿಸಿ ಶಾಲೆಗೆ ಆಗಮಿಸಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ ಶಿಕ್ಷಕಿಯನ್ನು ತಡೆದಿದ್ದು, ಬುರ್ಕಾ ತೆಗೆದು ಶಾಲೆಗೆ ಪ್ರವೇಶಿಸುವಂತೆ ಸೂಚಿಸಿದ್ದಾರೆ. ಬಳಿಕ ಗೇಟ್ ನಲ್ಲೇ ಬುರ್ಕಾ ತೆಗೆದು ಶಾಲೆಗೆ ಎಂಟ್ರಿ ಕೊಟ್ಟಿದ್ದಾರೆ.ಒಟ್ಟಾರೆ ರಾಜ್ಯದ ಹಲವು ಶಾಲೆಗಳಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ಪಾಲನೆಯಾದರೆ, ಇನ್ನು ಕೆಲ ಶಾಲೆಗಳಲ್ಲಿ ಹೈಕೋರ್ಟ್ ಆದೇಶ ಉಲ್ಲಂಘಿಸಿರುವ ಘಟನೆ ಬೆಳಕಿಗೆ ಬಂದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada