ಹೊಸಪೇಟೆ: ‘ಹಸಿವು ಮತ್ತು ಭಯ ಮುಕ್ತವಾದ ವಾತಾವರಣ ಸೃಷ್ಟಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಜಿಲ್ಲಾ ಸಮಿತಿ ಅಧ್ಯಕ್ಷ ವಲಿ ಬಾಷಾ ಒತ್ತಾಯಿಸಿದರು.ನಗರದಲ್ಲಿ ಶುಕ್ರವಾರ ‘ಜನಪರವಾದ ಜನತಾ ಬಜೆಟ್’ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ. 14ರಂದು ಮಂಡಿಸಲಿರುವ ರಾಜ್ಯ ಬಜೆಟ್ನಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗದವರು ಮತ್ತು ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಬೇಕು. ಅದಕ್ಕಿಂತ ಮುಖ್ಯವಾಗಿ ಹಸಿವು ಮುಕ್ತ, ಭಯ ಮುಕ್ತವಾದ ವಾತಾವರಣ ನಿರ್ಮಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದ ವರೆಗೆ ಏಕರೂಪ, ಸಂಪೂರ್ಣ ಉಚಿತ ಶಿಕ್ಷಣ ಕೊಡಬೇಕು. ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದ್ದು, ರಾಜ್ಯದಲ್ಲಿ ಅನುಷ್ಠಾನಗೊಳಿಸುವುದಿಲ್ಲವೆಂದು ನಿರ್ಣಯ ಅಂಗೀಕರಿಸಬೇಕು. ಎಲ್ಲ ತಾಲ್ಲೂಕುಗಳಲ್ಲಿ ಸುಸಜ್ಜಿತ ಸರ್ಕಾರಿ ಪದವಿ ಕಾಲೇಜು ನಿರ್ಮಿಸಬೇಕು ಎಂದು ಹಕ್ಕೊತ್ತಾಯ ಮಾಡಿದರು.ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಏರೋಸ್ಪೇಸ್-ಏರೋನಾಟಿಕಲ್ ಸಂಶೋಧನಾ ಕೇಂದ್ರ, ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ಸೇವೆ ಕಲ್ಪಿಸಬೇಕು. ಪ್ರತಿ ಪಂಚಾಯಿತಿಯಲ್ಲಿ ಆರೋಗ್ಯ ಕೇಂದ್ರ ಸ್ಥಾಪಿಸಬೇಕು. ಅಲ್ಪಸಂಖ್ಯಾತರ ಇಲಾಖೆಯ ಬಜೆಟ್ ಗಾತ್ರ ಹೆಚ್ಚಿಸಬೇಕು. ಉರ್ದು ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಉರ್ದು ಅಕಾಡೆಮಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿದರು.ಮತೀಯ ಹಾಗೂ ಜಾತಿ ಆಧಾರಿತ ದೌರ್ಜನ್ಯ ನಿಷೇಧ ಕಾಯ್ದೆ ಜಾರಿಗೆ ತರಬೇಕು. ಶಾಂತಿ ಕಾಪಾಡಲು ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು. ಉದ್ಯೋಗ ಸೃಷ್ಟಿಗೆ ಒತ್ತು ಕೊಡಬೇಕು. ನಿರುದ್ಯೋಗ ಪ್ರಮಾಣ ಹೆಚ್ಚಾಗಿರುವುದರಿಂದ ಯುವಕರು ತೊಂದರೆಗೆ ಸಿಲುಕಿದ್ದಾರೆ. ಖಾಲಿ ಉಳಿದ ಸರ್ಕಾರಿ ಹುದ್ದೆಗಳನ್ನು ತುಂಬಬೇಕು. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿ ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರೈತರ ಎಲ್ಲ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ದೊರಕಿಸಿಕೊಡಬೇಕು. ಬಿಲ್ಲವ ಅಭಿವೃದ್ಧಿ ನಿಗಮ ಸ್ಥಾಪಿಸಿ ₹500 ಕೋಟಿ ಮೀಸಲಿಡಬೇಕು. ಎಲ್ಲ ತಾಲ್ಲೂಕು, ಹೋಬಳಿಗಳಲ್ಲಿ ಕೌಶಲ ತರಬೇತಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದರು.ಹಿಜಾಬ್-ಕೇಸರಿ ಶಾಲಿನ ವಿವಾದ ನ್ಯಾಯಾಲಯದಲ್ಲಿದೆ. ಈ ಕುರಿತು ಈಗ ಪ್ರತಿಕ್ರಿಯಿಸುವುದಿಲ್ಲ. ಹೈಕೋರ್ಟ್ ತೀರ್ಪು ಹೊರಬಿದ್ದ ನಂತರ ಪಕ್ಷ ತನ್ನ ನಿಲುವು ಸ್ಪಷ್ಪಪಡಿಸಲಿದೆ. ಆದರೆ, ಹಿಜಾಬ್ ಧರಿಸಿಕೊಂಡು ಶಾಲಾ, ಕಾಲೇಜಿಗೆ ಹೋಗುವುದು ಹೊಸದೇನಲ್ಲ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.ಪಕ್ಷದ ಉಪಾಧ್ಯಕ್ಷ ನಜೀರ್ ಖಾನ್, ಕಾರ್ಯದರ್ಶಿ ಇರ್ಫಾನ್ ಕಟಗಿ, ಖಜಾಂಚಿ ಶೋಯೆಬ್ ನಿಯಾಜ್ ಇದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada