ಹೊಸಪೇಟೆ (ವಿಜಯನಗರ): ಇಲ್ಲಿನ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟಿದೆ.
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಬುಧವಾರ ‘ಬಿ’ ಫಾರಂ ಸಿಗುವ ನಿರೀಕ್ಷೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಇದ್ದರು.
ಆದರೆ, ಕೊನೆ ಗಳಿಗೆಯಲ್ಲಿ ಟಿಕೆಟ್ ಕೈ ತಪ್ಪಿರುವುದರಿಂದ ಹಲವರು ಸ್ವಪಕ್ಷಿಯರ ವಿರುದ್ಧವೇ ಬಂಡಾಯವೆದ್ದು, ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.
ಈಗಾಗಲೇ ಪಕ್ಷದ ನಿರ್ಧಾರವನ್ನು ಬಹಿರಂಗವಾಗಿಯೇ ಟೀಕಿಸಿರುವ ಬಿಜೆಪಿಯ ಬಿಸಾಟಿ ಸತ್ಯನಾರಾಯಣ, ‘ಕಾಂಗ್ರೆಸ್ನವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ’ ಎಂದು ಆರೋಪಿಸಿದ್ದಾರೆ. ಅವರು ಚುನಾವಣಾ ಕಣಕ್ಕೆ ದುಮುಕಿಲ್ಲ. ಆದರೆ, ಅಂತರ ಕಾಯ್ದುಕೊಳ್ಳುವ ಮಾತುಗಳನ್ನು ಆಡಿದ್ದಾರೆ. ಇನ್ನು, ಬಿಜೆಪಿ, ಆರ್ಎಸ್ಎಸ್ನಲ್ಲಿ ಸಕ್ರಿಯರಾಗಿರುವ ಅನಿಲ್ ಜೋಶಿ ಕೂಡ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಪಕ್ಷ ಅವರನ್ನು ಕಡೆಗಣಿಸಿರುವುದರಿಂದ ಅವರು ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ.