ಹುಬ್ಬಳ್ಳಿ, ಜೂ.4- ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಯಾರೊಂದಿಗೂ ಚರ್ಚೆ ಮಾಡಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆದಿಲ್ಲ. ಬದಲಿಗೆ ತಲೆ ಮೇಲೆ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿಯ ಬಿ ಟೀಂ ಯಾರೆಂಬುದು ಗೊತ್ತಾಗಲಿದೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಸೋತರೆ ಯಾವುದೇ ನಷ್ಟವಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಲು ಪ್ರಯತ್ನ ಮಾಡುತ್ತೇವೆ ಎಂದರು.
ಜೆಡಿಎಸ್ನ 32 ಶಾಸಕರಿದ್ದು, ಅಸಮಾಧಾನಗೊಂಡಿರುವವರು ಅಡ್ಡಮತದಾನ ಹಾಕುವುದಿಲ್ಲ ಎಂಬ ವಿಶ್ವಾಸವಿದೆ. ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಹಾಗೂ ಕಾಂಗ್ರೆಸ್ನ ಒಬ್ಬ ಅಭ್ಯರ್ಥಿ ಗೆಲ್ಲುತ್ತಾರೆ. ಆದರೆ, ನಾಲ್ಕನೇ ಸ್ಥಾನಕ್ಕೆ ಮಾತ್ರ ಪೈಪೋಟಿ ಇದೆ. ನಮ್ಮ ಅಭ್ಯರ್ಥಿ ಗೆಲುವಿಗೆ ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ನಾನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರೊಂದಿಗೂ ಮಾತುಕತೆ ಮಾಡಿಲ್ಲ ಎಂದರು. ಪಶ್ಚಿಮ ಹಾಗೂ ವಾಯುವ್ಯ ಕ್ಷೇತ್ರದ ವಿಧಾನಪರಿಷತ್ ಚುನಾವಣಾ ಪ್ರಚಾರಕ್ಕೆ ಬಂದಿರುವುದಾಗಿ ಹೇಳಿದರು.
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜನರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದರು.
ವಿಧಾನಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಾಧನೆ ಶೂನ್ಯ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶ್ರೀಶೈಲ ಗಡದಿನ್ನಿ ಅವರನ್ನು ಕಣಕ್ಕಿಳಿಸಿದ್ದೇವೆ ಎಂದು ತಿಳಿಸಿದರು.
ಧಾರವಾಡ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ. ಬಿ. ಗಂಗಾಧರ ಮಠ, ಮುಖಂಡರಾದ ಗುರುರಾಜ ಹುಣಸಿಮರದ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಾಜು ಅನಂತಸಾ ನಾಯಕವಾಡಿ, ರೇಖಾ ನಾಯಕರ, ಪರ್ವೇಜ್ ಅಹ್ಮದ್ ಕಟ್ಟೀಮನಿ, ಫತೇಶಾ ಯರಗಟ್ಟಿ, ಸಿದ್ಧಲಿಂಗೇಶ್ವರಗೌಡ ಮಹಾಂತ ಓಡೆಯರ ಅಪ್ರೋಜ್ ಮುಂತಾದವರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada