ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಎಮ್.ಆರ್.ಪಾಟೀಲ್ ನಾಮಪತ್ರ ಸಲ್ಲಿಕೆ…! ಸವಾಯಿ ಗಂಧರ್ವರ ನಾಡು ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಮ್.ಆರ್.ಪಾಟೀಲ್ ಅಪಾರ ಜನಸ್ತೋಮದೊಂದಿಗೆ ಮೆರವಣಿಗೆ ಮೂಲಕ ಬುಧವಾರ ನಾಮಪತ್ರ ಸಲ್ಲಿಸಲು ಆಗಮಿಸಿ ಶಕ್ತಿ ಪ್ರದರ್ಶನ ನಡೆಸಿದರು.
ಹುಬ್ಬಳ್ಳಿಯ ಸುಪ್ರಸಿದ್ಧ ಶ್ರೀ ಸಿದ್ದಾರೋಢಮಠ ಹಾಗೂ ಮೂರುಸಾವಿರಮಠದ ಕರ್ತೃ ಗದ್ದುಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಕುಂದಗೋಳ ಪಟ್ಟಣದಲ್ಲಿ ಕುರುಬಗೇರಿ ಓಣಿಯ ಶ್ರೀ ಕರಿಸಿದ್ದೇಶ್ವರ ದೇವಸ್ಥಾನ ಹಾಗೂ ಗಾಳಿ ಮರೆಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಮೆರವಣಿಗೆ ಆರಂಭಿಸಿದರು.
ಅಪಾರ ಜನಸ್ತೋಮದ ಮಧ್ಯೆ ಮೆರವಣಿಗೆಯಲ್ಲಿ ಆಗಮಿಸಿದ ಎಮ್.ಆರ್.ಪಾಟೀಲ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಬಸವರಾಜ ಕುಂದಗೋಳಮಠ ಸೇರಿದಂತೆ ಅನೇಕ ಮುಖಂಡರೊಂದಿಗೆ ಮೆರವಣಿಗೆ ರ್ಯಾಲಿ ನಡೆಸಿದರು.
ಗಾಳಿ ಮರೆಮ್ಮ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಉದ್ದಕ್ಕೂ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಸುಡು ಬಿಸಿಲನ್ನು ಲೆಕ್ಕಿಸದೇ ಬಿಜೆಪಿ ಬಾವುಟ ಹಿಡಿದುಕೊಂಡು ಪಾಲ್ಗೊಂಡಿದ್ದರು. ಧೋಲ್, ತಾಶ, ಡೊಳ್ಳು ವಾದನ ಸೇರಿದಂತೆ ವಿವಿಧ ವಾದ್ಯ ಮೇಳಗಳು ಮೆರವಣಿಗೆಯಲ್ಲಿ ಇದ್ದವು.
ಬಳಿಕ ತಹಶಿಲ್ದಾರರ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ಬಸವರಾಜ ಹೆಗ್ಗನಾಯಕ ಅವರಿಗೆ ಎಮ್.ಆರ್.ಪಾಟೀಲ್ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಪ ಸದಸ್ಯ ಪ್ರದೀಪ್ ಶೆಟ್ಟರ್, ಗ್ರಾಮಾಂತರ ಅಧ್ಯಕ್ಷ ಬಸವರಾಜ ಕುಂದಗೋಳಮಠ ಸೇರಿದಂತೆ ಇತರರು ಇದ್ದರು.
https://play.google.com/store/apps/details?id=com.speed.newskannada