ಈ ವೇಳೆ ಹೆಚ್ಚು ಭಾರದಿಂದಾಗಿ ಚಪ್ಪಡಿ ಕುಸಿದಿದ್ದು, ಅದರ ಮೇಲಿದ್ದವರೆಲ್ಲ ಬಾವಿ ಒಳಗೆ ಬಿದ್ದಿದ್ದಾರೆ. ತಕ್ಷಣ ಎಲ್ಲರನ್ನು ಬಾವಿಯಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರಲ್ಲಾಗಲೇ 11 ಮಂದಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಇಬ್ಬರು ಗಂಭೀರ ಗಾಯದಿಂದ ಬಳಲುತ್ತಿದ್ದಾರೆ.
ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಬಂಧು-ಬಳಗದವರು ಆಸ್ಪತ್ರೆಗೆ ದೌಡಾಯಿಸಿದ್ದು, ತಮ್ಮ ಸಂಬಂಧಿಕರು ಹಾಗೂ ಕುಟುಂಬದ ಸದಸ್ಯರ ಮೃತದೇಹವನ್ನು ನೋಡಿ ಗೋಳಿಡುತ್ತಿದ್ದು, ಇಡೀ ಆಸ್ಪತ್ರೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮನಕಲಕುವಂತಿದೆ.
ಈ ಬಗ್ಗೆ ಮಾತನಾಡಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಸ್. ರಾಜಲಿಂಗಂ, ಆಕಸ್ಮಿಕವಾಗಿ ಬಾವಿಗೆ ಬಿದ್ದು 11 ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಬಗ್ಗೆ ನಾವು ಮಾಹಿತಿ ಪಡೆದೆವು. ಈ ಘಟನೆ ಮದುವೆ ಸಂಭ್ರಮದ ವೇಳೆ ನಡೆದಿದೆ. ಬಾವಿಗೆ ಮುಚ್ಚಲಾಗಿದ್ದ ಚಪ್ಪಡಿ ಮೇಲೆ ಕುಳಿತಿದ್ದಾಗ ಭಾರದಿಂದ ಚಪ್ಪಡಿ ಕುಸಿದು ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. ಕೂಡಲೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಯೋಗಿ ಅವರು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.