ಈ ಹಿಂದೆ ‘ಪಲ್ಲಕ್ಕಿ’, ‘ಅಮೃತವಾಹಿನಿ’ಯಂಥ ಚಿತ್ರಗಳನ್ನು ನಿರ್ದೇಶಿಸಿದ ಕೆ.ನರೇಂದ್ರಬಾಬು ಅವರ ನಿರ್ದೇಶನದಲ್ಲಿ, ರಾಘವೇಂದ್ರ ರಾಜ್ಕುಮಾರ್, ಶ್ರುತಿ, ಪ್ರಮೋದ್ ಶೆಟ್ಟಿ ಅಭಿನಯಿಸಿರುವ ಚಿತ್ರ ‘13’ ಯುವಿ ಪ್ರೊಡಕ್ಷನ್ ಅಡಿಯಲ್ಲಿ ಈ ಚಿತ್ರವನ್ನು ಸಂಪತ್ ಕುಮಾರ್, ಮಂಜುನಾಥ್, ಮಂಜುನಾಥಗೌಡ ಸೇರಿ ನಿರ್ಮಿಸುತ್ತಿದ್ದಾರೆ
ರಾಘವೇಂದ್ರ ರಾಜ್ಕುಮಾರ್ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಹಾಗೂ ಟೀ ಅಂಗಡಿ ನಡೆಸುವ ಸಾಯಿರಾಬಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರದಲ್ಲಿ ಶ್ರುತಿ ಅವರು ನಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ನಡದೆ ಒಂದು ನೈಜ ಘಟನೆಯನ್ನು ಸ್ಫೂರ್ತಿಯಾಗಿಟ್ಟುಕೊಂಡು ಈ ಚಿತ್ರಕಥೆಯನ್ನು ನರೇಂದ್ರ ಬಾಬು ಹೆಣೆದಿದ್ದಾರೆ.ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರತಂಡ, ಚಿತ್ರದ ಮೇಕಿಂಗ್ ವೀಡಿಯೋ ತೋರಿಸಿ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿತು. ಅಂತರ್ಜಾತೀಯ ಪ್ರೇಮ ಕಥೆ ಇದಾಗಿದ್ದು, ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಗಳಿಬ್ಬರೂ ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವರೀತಿ ಕಷ್ಟಪಡುತ್ತಾರೆ ಎಂಬುದನ್ನು ಹೇಳುವ, ಮನುಷ್ಯ ಸಂಬಂಧಗಳನ್ನು ಬೆಸೆಯುವ ಕಥೆಯಿದು. ಮುಹೂರ್ತದ ಸಂದರ್ಭದಲ್ಲಿ 3 ತಿಂಗಳಲ್ಲಿ ಮೊದಲಪ್ರತಿ ಹೊರ ತರುತ್ತೇನೆ ಎಂದು ಹೇಳಿದ್ದೆ, ಆದರೆ ಸಾಕಷ್ಟು ಅಡೆತಡೆಗಳುಂಟಾಗಿ 6 ತಿಂಗಳಾಯಿತು.
ಒಬ್ಬರಿಗೆ ಹಾರ್ಟ್ ಅಟ್ಯಾಕ್ ಆಯ್ತು, ನನ್ನ ಕಾಲಿಗೂ ಪೆಟ್ಟಾಗಿ ಇನ್ನೂ ಸರಿಯಾಗಿಲ್ಲ, ಕೊಟ್ಟಿಗೆಹಾರದಲ್ಲಿ ಮಾಡಬೇಕೆಂದಿದ್ದ ಸೀನನ್ನು ಮಂಡ್ಯ ಹತ್ತಿರದ ಹಳ್ಳಿಯೊಂದರಲ್ಲಿ ಮಾಡಿದ್ದೇನೆ. ನನ್ನ ತಂಡ ಜೊತೆ ನಿಂತಿದ್ದರಿಂದ ಇಲ್ಲಿಯವರೆಗೆ ಬಂದಿದ್ದೇನೆ. 4 ಜನ ಪ್ರೊಡ್ಯೂಸರ್ ಗಳು ೪ ಪಿಲ್ಲರ್ ಗಳಂತೆ ನಿಂತಿದ್ದಾರೆ. ರಾಗಣ್ಣಾವರನ್ನು ಈವರೆಗೆ ನೋಡಿದ್ದಕ್ಕಿಂತ ಬೇರೆಯದೇ ರೀತಿ ನೋಡಬಹುದು ಎಂದು ನಿರ್ದೇಶಕ ನರೇಂದ್ರ ಬಾಬು ಹೇಳಿದರು.
ಚಿತ್ರದ ನಾಯಕ ರಾಘಣ್ಣ ಮಾತನಾಡುತ್ತಾ ನಿರ್ದೇಶಕರು ಬಂದು ಈ ಟೈಟಲ್ ಹೇಳಿದಾಗ ’13’ ಇದೇನಿರಬಹುದು ಅನಿಸಿತ್ತು. ಶೃತಿ ಮಾಡುತ್ತಿದ್ದಾರೆ ಅಂದಾಗ ಇಷ್ಟವಾಯ್ತು. ನಮಗೂ ಆಕ್ಟ್ ಮಾಡುವಾಗ ಕುತೂಹಲ ಮೂಡುತ್ತೆ. ಚಿತ್ರದಲ್ಲಿ 13 ಪದಕ್ಕೆ ಅರ್ಥ ಕೊಡಲು ನಿರ್ದೇಶಕರು ಪ್ರಯತ್ನಿಸಿದ್ದಾರೆ, ಈಗ ಶೂಟಿಂಗ್ ಮಾಡುವುದು ಮುಖ್ಯವಲ್ಲ, ನಂತರ ಅದನ್ನು ಹೇಗೆ ಪ್ರೊಮೋಟ್ ಮಾಡಬೇಕು ಅನ್ನೋದು ಮುಖ್ಯ. ಶಾಲೆಯ ಕಟ್ಟಡಗಳನ್ನು ಅಭಿವೃದ್ಧಿ ಪಡಿಸುವುದು,ಇಂಥ ಕೆಲಸಗಳನ್ನು ಮಾಡುವ ಮೂಲಕ ಪ್ರೊಮೋಟ್ ಮಾಡಬೇಕಿದೆ. ಎಲ್ಲೋ ಒಂದುಕಡೆ ಸಿನಿಮಾದವರು ಸೇವೆಯನ್ನೂ ಮಾಡ್ತಾರೆ ಅನ್ನೋದು ಜನರಿಗೆ ಗೊತ್ತಾಗಬೇಕು. ಶ್ರುತಿ ಅದ್ಭುತ ನಟಿ. ಅವರ ಜೊತೆ 2ನೇ ಚಿತ್ರ ಎಂದರು.
https://play.google.com/store/apps/details?id=com.speed.newskannada